ಹುಬ್ಬಳ್ಳಿ: ಅದ್ದೂರಿ ಮೆರವಣಿಗೆಯ ಮೂಲಕ ಸಾಗಿ ಬಂದು ಇಂದು ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ನಗರದ ಮೂರುಸಾವಿರ ಮಠದ ಆವರಣದಿಂದ ಆರಂಭವಾದ ಮೆರವಣಿಗೆ ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ, ರಾಯಣ್ಣ ವೃತ್ತ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿತು.
ಮೆರವಣಿಗೆಯುದ್ದಕ್ಕೂ ಪಂಚವಾದ್ಯ, ಡೋಲು, ನಾಶಿಕ್ ಜಾಂಝ್ ಮೇಳ ಕಂಡುಬಂತು. ಶಾಸಕ ಅರವಿಂದ ಬೆಲ್ಲದ ನೃತ್ಯ ಮಾಡುವ ಮೂಲಕ ಗಮನ ಸೆಳೆದರು. ಭಾರತ ಮಾತೆಯ ಆಳೆತ್ತರದ ಭಾವಚಿತ್ರ, ಭಗವಾಧ್ವಜ, ಕೇಸರಿ ಬಾವುಟಗಳು ರಾರಾಜಿಸಿದವು. ಬಿಜೆಪಿ, ಆರ್ಎಸ್ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಎಚ್ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದರು. ಮೆರವಣಿಗೆ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಡಿಸಿಪಿ ರಾಜೀವ್ ಎಂ. ನೇತೃತ್ವ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು. ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ, ಸಿಎಆರ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
ಈದ್ಗಾ ಮೈದಾನದಲ್ಲಿ ಗಣಪತಿ ವಿರಾಜಮಾನ: ಸಾಕಷ್ಟು ವಿರೋಧದ ನಡುವೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಅದ್ಧೂರಿಯಾಗಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಮೂರು ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.