ಮಂಗಳೂರು: ಮುಂದಿನ ಚುನಾವಣೆಗಳಲ್ಲಿ ನಾವು ಗೆಲವು ಸಾಧಿಸಲಿದ್ದು, ಇದರಿಂದಾಗಿ ಗ್ರಾಮ ಪಂಚಾಯತ್ನಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹರಿಹಾಯ್ದಿದ್ದಾರೆ.
ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ, ಮುಂದಿನ 4 ವಿಧಾನಪರಿಷತ್, 2 ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವುವಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಗ್ರಾಮ ಪಂಚಾಯತಿ ಮಟ್ಟದಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬಿಜೆಪಿ ರಾಜ್ಯಕಾರ್ಯಕಾರಿಣಿ ಭರ್ಜರಿಯಾಗೇ ನಡೆಯುತ್ತಿದ್ದು, ಸಮಾರಂಭವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಮಂಗಳೂರಿನ ಸಿವಿ ರಮಣ ಪೈ ಹಾಲ್ ನಲ್ಲಿ ಸಮಾರಂಭ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸದಾನಂದ ಗೌಡ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.
20 ವರ್ಷಗಳ ನಂತರ ಮಂಗಳೂರಿನಲ್ಲಿ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತದೆ. 2014 ರಲ್ಲಿ ಬಿಜೆಪಿ 104 ಸೀಟ್ ಗಳಿಸಿತ್ತು. ದೇಶದ ಇತಿಹಾಸದಲ್ಲಿ ಮೊದಲಬಾರಿಗೆ 18 ಮಂದಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿಗೆ ಸೇರಿದ್ದರು. 18 ಜನರ ಸಹಕಾರದಿಂದ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಕೋರ್ ಕಮಿಟಿ ಉದ್ಫಾಟನಾ ಸಮಾರಂಭದಲ್ಲಿ ಸಿಎಂ ಸ್ಮರಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಚುನಾವಣೆಯನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಅಭ್ಯರ್ಥಿಗಳ ಗೆಲುವಿಗೆ ಸಂಪೂರ್ಣ ಶ್ರಮವನ್ನು ಹಾಕಬೇಕು ಎಂದು ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಕಾರ್ಯಕಾರಣಿ ಸಭೆ ಭರ್ಜರಿಯಾಗಿ ನಡೆಯುತ್ತಿದ್ದು, ಮಂಗಳೂರು ಸಂಪೂರ್ಣವಾಗಿ ಲೈಟಿಂಗ್ಸ್ನಿಂದ ಕಂಗೊಳಿಸುತ್ತಿದೆ. ಪೂರ್ತಿ ಬಿಜೆಪಿಮಯವಾಗಿದೆ.