ಬೆಂಗಳೂರು : ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಜಾರಿ ಮಾಡಲು ಬಿಜೆಪಿ ಆಗ್ರಹಿಸಿದೆ. ಈ ಸಂಬಂಧ ಇಂದು ಬಿಜೆಪಿ ನಿಯೋಗವು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಚೇರ್ಮನ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿತು.
ಕೆ ಜಿ ರಸ್ತೆಯಲ್ಲಿರುವ ಕಾವೇರಿ ಭವನದಲ್ಲಿ ಜಲ ಮಂಡಳಿ ಎದುರು ಬಿಜೆಪಿ ಪ್ರತಿಭಟನೆ ನಡೆಸಿತು. ನಂತರ ಅಧ್ಯಕ್ಷರನ್ನು ಭೇಟಿಯಾದ ಬಿಜೆಪಿ ನಿಯೋಗ, ಮುಂಬರುವ ದಿನಗಳಲ್ಲಿ ಬೆಂಗಳೂರು ಮಹಾನಗರಕ್ಕೆ ಉದ್ಭವಿಸುವ ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆಯಿತು. ಬೆಂಗಳೂರು ನಗರವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ಪ್ರಮುಖ ನಗರವಾಗಿದೆ. ಇಲ್ಲಿನ ಜಲಸಂಕಷ್ಟ ಸಾಧ್ಯತೆಯನ್ನು ಮನಗಂಡು ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅನುಷ್ಠಾನ ಮಾಡುವಂತೆ ಒತ್ತಾಯಿಸಿತು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಚೇರ್ಮನ್ ಅವರಿಗೆ ಮನವಿ ಸಲ್ಲಿಸಿದ ಬಿಜೆಪಿ ನಿಯೋಗರಾಜ್ಯ ಸರ್ಕಾರವು ಪ್ರಸ್ತುತ ದಿನಗಳಲ್ಲಿ ನೀರಿನ ಒಳ ಹರಿವನ್ನು ಪರಿಗಣಿಸದೆ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಿ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡಿದೆ. ಇದರಿಂದ ರಾಜ್ಯದ ರೈತರಿಗೆ ಧಕ್ಕೆಯಾಗುವುದಲ್ಲದೆ ರಾಜ್ಯದ ರಾಜಧಾನಿ ಬೆಂಗಳೂರಿಗೆ, ಎಲ್ಲಾ ಜಿಲ್ಲೆಗಳ ನಗರಗಳ ಜನತೆಗೆ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಕಾವೇರಿ ನ್ಯಾಯಾಧಿಕರಣದ ಅಂತಿಮ ತೀರ್ಪು ಹಾಗೂ ಸರ್ವೋಚ್ಚ ನ್ಯಾಯಾಲಯದ ಮಾರ್ಪಡಿಸಿದ ಆದೇಶದನ್ವಯ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ರಾಜ್ಯವು ತನ್ನ ಗಡಿಯ ಒಳ ಭಾಗದಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಕೈಗೊಳ್ಳಲು ಅವಕಾಶವಿದೆ.
ಕರ್ನಾಟಕ ರಾಜ್ಯವು ಮೇಕೆದಾಟು ಯೋಜನೆಯ ಪೂರ್ವ ಸಾಧ್ಯತಾ ವರದಿ (ಪ್ರಿ ಫಿಸಿಬಿಲಿಟಿ ರಿಪೋರ್ಟ್) ಅನ್ನು ದಿನಾಂಕ 4-8-2018 ರಂದು ಕೇಂದ್ರ ಜಲ ಆಯೋಗಕ್ಕೆ ಸದರಿ ನಮ್ಮ ಪ್ರಸ್ತಾವನೆಯನ್ನು ಪರಿಗಣಿಸಿ, ಕೇಂದ್ರ ಜಲ ಆಯೋಗವು ದಿನಾಂಕ 22-11-2018 ರಂದು ವಿವರವಾದ ಯೋಜನಾ ವರದಿಯನ್ನು ತಯಾರಿಸಲು ಅನುಮತಿ ಸಹ ನೀಡಿತ್ತು ಎಂದು ಗಮನ ಸೆಳೆಯಿತು.