Breaking News

ರೈತರಿಗೆ ನಿತ್ಯ 5 ತಾಸು ವಿದ್ಯುತ್ ಪೂರೈಕೆ ಮಾಡಿ, ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಿ: ಸಿಎಂ

Spread the love

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡುವಂತೆ ಹಾಗೂ ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಕಾಂ ಎಂಡಿಗಳಿಗೆ ಸೂಚನೆ ನೀಡಿದರು.

 

ಗೃಹ ಕಚೇರಿ ಕೃಷ್ಣಾದಲ್ಲಿಂದು ಇಂಧನ‌ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದೆ. ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್‌ ಒದಗಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಲಭ್ಯವಿರುವ ವಿದ್ಯುತ್ತಿನ ದಕ್ಷ ಹಂಚಿಕೆಯೂ ಅತಿ ಮುಖ್ಯ. ಎಸ್ಕಾಂಗಳ ಎಂಡಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಎಲ್ಲ ಮುಖ್ಯ ಎಂಜಿನಿಯರುಗಳನ್ನು ಜಿಲ್ಲೆಗೊಬ್ಬರಂತೆ ನೋಡಲ್‌ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಅವರು ನಿರಂತರ 5 ಗಂಟೆ ವಿದ್ಯುತ್‌ ಪೂರೈಕೆ ಯಾವುದೇ ಅಡಚಣೆಯಿಲ್ಲದೆ ಆಗುವಂತೆ ಖಾತರಿಪಡಿಸಬೇಕು ಎಂದರು.

ಅಧಿಕಾರಿಗಳಿಗೆ ತರಾಟೆ: ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ, ಸಿದ್ಧತೆ ಏಕೆ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂಧನ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇರುವ ವಿದ್ಯುತ್ ಅ​​ನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್‌ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲಿ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್‌ಗಳು ಫೀಲ್ಡ್‌ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರದಲ್ಲಿ ಉತ್ತಮವಾದ ಅಗತ್ಯ ಮಳೆ ಆಗಿದ್ದರೂ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮಳೆ ಕೊರತೆ ಆಗಿ, ಬರಗಾಲ ಬಂದಿದೆ. ಅದನ್ನು ರೈತರಿಗೆ ಮನವರಿಕೆ ಮಾಡಿಸಬೇಕು. ರೈತರಿಗೆ ಯಾವ ವೇಳೆ ಎಷ್ಟು ವಿದ್ಯುತ್ ಅಗತ್ಯವಿದೆ ಎನ್ನುವುದನ್ನು ಸರಿಯಾಗಿ ಅರ್ಥಮಾಡಿಕೊಂಡು ಇರುವ ವಿದ್ಯುತ್​ನ್ನು ಅವರಿಗೆ ಅಗತ್ಯ ವೇಳೆಯಲ್ಲಿ ಸರಬರಾಜು ಮಾಡಬೇಕು ಎಂದು ಸಲಹೆ ನೀಡಿದರು.

ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ಸೋರಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ?. ವಿಚಕ್ಷಣಾ ದಳದಲ್ಲಿ ಎಷ್ಟು SPಗಳು ಇದ್ದೀರಿ?. ಏನು ಮಾಡುತ್ತಿದ್ದೀರಿ?. ಇವರು ಎಷ್ಟು ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ್ದಾರೆ ಎನ್ನುವುದನ್ನು ನಿಗಾವಹಿಸಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಸೂಚನೆ ನೀಡಿ ಎನ್ನುವ ನಿರ್ದೇಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆಯಾಗುತ್ತಿರುವುದನ್ನು ಖಾತರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಕಳೆದ ಐದು ವರ್ಷಗಳಿಂದ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ ಹೆಚ್ಚಳ ಕೇವಲ 4000 ಮೆಗಾವ್ಯಾಟ್ ನಷ್ಟು ಮಾತ್ರ ಇದೆ. ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ 32,000 ಮೆಗಾವ್ಯಾಟ್‌ ಇದ್ದರೂ ಇದರಲ್ಲಿ 16 ಸಾವಿರ ಮೆಗಾವ್ಯಾಟ್‌ ಸೌರ ವಿದ್ಯುತ್‌ ಆಗಿದೆ. ಇದು ಹಗಲು ಹೊತ್ತಿನಲ್ಲಿ ಮಾತ್ರ ಉತ್ಪಾದನೆ ಆಗುವುದರಿಂದ ಬೇಡಿಕೆ ನಿರ್ವಹಣೆಯಲ್ಲಿ ವ್ಯತ್ಯಯವಾಗುತ್ತಿದೆ. ಜೊತೆಗೆ ಕಲ್ಲಿದ್ದಲಿನಲ್ಲಿ ಕೆಲವು ಸಮಸ್ಯೆಗಳಿದ್ದುದನ್ನು ನಿವಾರಿಸಲಾಗಿದೆ. ಇದೀಗ ಆಮದು ಕಲ್ಲಿದ್ದಲು ಖರೀದಿಗೆ ಟೆಂಡರ್‌ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

IEX/ BILATERALನಲ್ಲಿ ವಿದ್ಯುತ್‌ ಪಡೆಯಲು ಕ್ರಮ: ನವೆಂಬರ್‌ನಿಂದ ಉತ್ತರ ಪ್ರದೇಶದಿಂದ 300 ಮೆ.ವ್ಯಾ., ಪಂಜಾಬ್‌ ನಿಂದ 600 ಮೆ.ವ್ಯಾ. ವಿದ್ಯುತ್‌ ಪಡೆಯಲಾಗುವುದು. ಕೆಇಆರ್​ಸಿ ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ರಾಜ್ಯದಲ್ಲಿನ ವಿದ್ಯುತ್‌ ಉತ್ಪಾದಕರಿಂದ ವಿದ್ಯುತ್‌ ಪಡೆಯಲು ರಾಷ್ಟ್ರೀಯ ವಿಪತ್ತಿನಡಿ ವಿದ್ಯುತ್‌ ಕಾಯ್ದೆಯ ಸೆಕ್ಷನ್‌ 11ನ್ನು ಜಾರಿಗೊಳಿಸಲಾಗಿದೆ. ಆ ಮೂಲಕ ವಿದ್ಯುತ್‌ ಕೊರತೆಯನ್ನು ನಿವಾರಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.

ದಕ್ಷಿಣದ ಎಲ್ಲ ರಾಜ್ಯಗಳಲ್ಲಿ ವಿದ್ಯುತ್‌ ಕೊರತೆ ತೀವ್ರವಾಗಿದೆ. ಪ್ರತಿ ವರ್ಷ ನೀವು contingency plan ಹೊಂದಿರಬೇಕು. ಯುದ್ಧಕಾಲೇ ಶಸ್ತ್ರಾಭ್ಯಾಸ ಎಂಬಂತೆ ಕಾರ್ಯಪ್ರವೃತ್ತರಾದರೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಎಚ್ಚರಿಸಿದರು.ಶೇ.13 ರಷ್ಟು ವಿದ್ಯುತ್‌ ವಿತರಣಾ ನಷ್ಟವಾಗುತ್ತಿದೆ. ವಿದ್ಯುತ್‌ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್‌ ಕಳವು ಅತಿ ಕಡಿಮೆ ಎಂದು ಅಧಿಕಾರಿಗಳು ತಿಳಿಸಿದರು.

ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲವು ಜಿಲ್ಲೆಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾದ ಕೂಡಲೇ ಬೇಡಿಕೆ ಇಳಿಕೆಯಾಗಲಿದೆ. ಕಬ್ಬು ಅರೆಯುವಿಕೆಯೊಂದಿಗೆ ಕೊ-ಜನರೇಶನ್‌ ನಿಂದ ವಿದ್ಯುತ್‌ ಲಭ್ಯವಾಗುತ್ತದೆ ಎಂದು ಸಭೆಗೆ ವಿವರಿಸಲಾಯಿತು.

ಸಭೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ವಿದ್ಯುತ್‌ ಉತ್ಪಾದನೆ, ಪ್ರಸರಣೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ