ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯುತ್ತಿರುವ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಜನಸಮೂಹವೇ ಹರಿದುಬಂದಿದೆ. ಅಹವಾಲು ಸಲ್ಲಿಸಲು ಬೆಳಿಗ್ಗೆಯಿಂದಲೇ ಜನರು ಸರದಿ ಸಾಲಿನಲ್ಲಿ ನಿಂತಿದ್ದು, ಸಿಎಂ ಸಿದ್ದರಾಮಯ್ಯ ಜನರ ಸಮಸ್ಯೆ ಆಲಿಸುತ್ತಿದ್ದಾರೆ.
ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡು ಸರ್ಕಾರಿ ಕದ ತಟ್ಟುತ್ತಿರುವ ಸಾರ್ವಜನಿಕರು ನೇರವಾಗಿ ಸಿಎಂ ಬಳಿ ಪರಿಹಾರಕ್ಕೆ ಮೊರೆ ಇಡುತ್ತಿದ್ದಾರೆ. ಸಿಎಂ ಸಹನೆಯಿಂದ ಜನರ ಸಮಸ್ಯೆ ಆಲಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ. ವಿಶೇಷಚೇತನರು, ಹಿರಿಯ ನಾಗರಿಕರು, ಮಹಿಳೆಯರು ಮಕ್ಕಳೊಂದಿಗೆ ಆಗಮಿಸಿ ಅಳಲು ತೋಡಿಕೊಳ್ಳುತ್ತಿರುವ ದೃಶ್ಯಗಳು ಕಂಡುಬಂದವು.
ಗೃಹ ಕಚೇರಿ ಕೃಷ್ಣಾಗೆ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೆಜೆಸ್ಟಿಕ್ ಹಾಗೂ ರೈಲ್ವೆ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಅಪಾರ ಪ್ರಮಾಣದಲ್ಲಿ ಜನರು ಗೃಹ ಕಚೇರಿಗೆ ಆಗಮಿಸುತ್ತಿದ್ದಾರೆ. ಹೆಚ್ಚಾಗಿ ಪಿಂಚಣಿ, ಆರೋಗ್ಯ, ಕಂದಾಯ ಇಲಾಖೆ, ವಸತಿ ಸಮಸ್ಯೆಗಳು ಸೇರಿದಂತೆ ನಾನಾ ಅಹವಾಲನ್ನು ಸಿಎಂ ಬಳಿ ಜನರು ಸಲ್ಲಿಸುತ್ತಿದ್ದಾರೆ.
ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ಗಳನ್ನು ಸ್ಥಾಪಿಸಲಾಗಿದೆ. ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿ ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುತ್ತಾರೆ. ಕೌಂಟರ್ಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ತಮ್ಮ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.
ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ನೀಡಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಬೇಕಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿ ಪತ್ತೆಹಚ್ಚಲು ಅನುಕೂಲವಾಗಲಿದೆ.