ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ( Gruha Lakshmi Scheme ) ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.
ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.
ಮೊದಲ ಕಂತು ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.