ಹೈದರಾಬಾದ್: ತೆಲಂಗಾಣದಲ್ಲಿ ನಿನ್ನೆಯಷ್ಟೇ (ನ.30) ಮತದಾನ ಮುಕ್ತಾಯವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವನ್ನು ವಿವಿಧ ಮತಗಟ್ಟೆಗಳ ಸಮೀಕ್ಷೆ ತಿಳಿಸಿವೆ. ಆಡಳಿತಾರೂಢ ಬಿಆರ್ಎಸ್ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಇದ್ದು, ಕುದುರೆ ವ್ಯಾಪಾರ ಸಂಭವವನ್ನು ತಡೆಗಟ್ಟಲು ಡಿ.3ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತೆಲಂಗಾಣದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವತ್ತ ಕಾಂಗ್ರೆಸ್ ಹೈಕಮಾಂಡ್ ಚಿಂತಿಸುತ್ತಿದೆ ಎಂದು ತಿಳಿದುಬಂದಿದೆ.
ತೆಲಂಗಾಣ ಕಾಂಗ್ರೆಸ್ ಘಟಕದ ಮುಖ್ಯಸ್ಥ ರೇವಂತ್ ರೆಡ್ಡಿ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ನಡೆಯಬಹುದು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಭಾನುವಾರದ ಮತ ಎಣಿಕೆಯ ನಂತರ ಶಾಸಕರನ್ನು ಸ್ಥಳಾಂತರಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್ಗೆ 70ಕ್ಕಿಂತ ಕಡಿಮೆ ಸೀಟುಗಳು ಬಂದರೆ, ಶಾಸಕರನ್ನು ಬೆಂಗಳೂರು ಅಥವಾ ಬೇರೆಡೆಗೆ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಸ್ತಾಪವಿದೆ. ಬಹುಶಃ ಶಾಸಕರನ್ನು ಹೋಟೆಲ್ ಅಥವಾ ರೆಸಾರ್ಟ್ಗೆ ಸ್ಥಳಾಂತರ ಮಾಡಬಹುದು ಎಂದು ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.