ಬೆಂಗಳೂರು/ ಬೆಳಗಾವಿ : ರಾಜ್ಯದಲ್ಲಿ ಘೋಷಣೆಯಾದ ಹೊಸ ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಗುರುವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಹೊಸದಾಗಿ ಘೋಷಣೆಯಾದ ತಾಲೂಕು ಕೇಂದ್ರಗಳ ಬಹಳಷ್ಟು ಆಸ್ಪತ್ರೆಗಳು ತಾಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಕೆಯಾಗಿಲ್ಲ. ಇದರೊಂದಿಗೆ ರಾಜ್ಯದಲ್ಲಿ 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರುವ ಅರ್ಹತೆ ಹೊಂದಿವೆ. ಶಾಸಕರ ಬೇಡಿಕೆಗಳಿಗೆ ಸ್ಪಂದಿಸಿ ಹಣಕಾಸಿ ಲಭ್ಯತೆ ನೋಡಿಕೊಂಡು ಮೇಲ್ದರ್ಜೆಗೆ ಏರಿಸುವ ಕಾರ್ಯವನ್ನು ಹಂತ ಹಂತವಾಗಿ ಮಾಡಲಾಗುವುದು ಎಂದರು.
ದೇವದುರ್ಗ ಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ : ಶಾಸಕಿ ಕೆ.ಕರೆಮ್ಮ ಅವರ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಂದಿನ ವರ್ಷದ ಆಯವ್ಯಯದಲ್ಲಿ ದೇವದುರ್ಗ ಪಟ್ಟಣದಲ್ಲಿ ಹೊಸದಾಗಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಒದಗಿಸುವ ಭರವಸೆ ನೀಡಿದರು. ಇದರೊಂದಿಗೆ ಗಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸುವುದಕ್ಕೂ ಸಮ್ಮತಿಸಿದರು.