ಬೆಂಗಳೂರು: ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು ಅವಿವೇಕಿಗಳೇ ತುಂಬಿದ್ದಾರೆ. ರೈತರು ಪರಿಹಾರದ ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ನಾಲಿಗೆ ಹರಿಬಿಟ್ಟಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಇದೀಗ ರೈತರು ಬರಗಾಲ ಬರಲಿ ಎಂದು ಕಾಯುತ್ತಿರುತ್ತಾರೆ ಎಂದಿದ್ದಾರೆ.
ಬರ ಬರಲಿ ಎಂದು ರೈತರು ಕಾಯ್ದು ಕೂತಿರಲಿಲ್ಲ, ಕಾಂಗ್ರೆಸ್ ಕಾಲ್ಗುಣದಿಂದ ಬರಗಾಲ ಬಂದಿದೆ ಎನ್ನುವುದು ಅಷ್ಟೇ ಸತ್ಯ. ರೈತ ವಿರೋಧಿ ಸರ್ಕಾರ ಅನ್ನದಾತನನ್ನು ಅಪಹಾಸ್ಯ, ಅವಮಾನ ಮಾಡುತ್ತಾ ಅವರನ್ನು ಕುಗ್ಗಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದೆ.