ಬೆಂಗಳೂರು, : ಕೊಪ್ಪಳ ಸಂಸದ ಸಂಗಣ್ಣ ಕರಡಿ (Sanganna Karadi) ಹಾಗೂ ಬೀದರ್ ಸಂಸದರೂ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ನಾಯಕರೊಂದಿಗೆ ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಬುಧವಾರ ರಾಜ್ಯಾಧ್ಯಕ್ಷಬಿವೈ ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಆಂತರಿಕ ಕಲಹ ಸ್ಫೋಟಗೊಂಡು ಭಗವಂತ ಖೂಬಾ ಸಭೆಯಿಂದ ಹೊರನಡೆದ ಘಟನೆ ನಡೆಯಿತು.
ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮತ್ತೆ ಟಿಕೆಟ್ ನೀಡುವುದನ್ನು ಪಕ್ಷದ ಪದಾಧಿಕಾರಿಗಳು ವಿರೋಧಿಸಿದರು. ಇತ್ತ ಖೂಬಾ ಸಂಸದರಾಗಿರುವ ಬೀದರ್ನಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ವಶವಾಗಿದೆ. ಆದರೆ, ಬಿಜೆಪಿ ಶಾಸಕರು ಖೂಬಾಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದಾರೆ.
ಭಗವಂತ ಖೂಬಾ ಅವರು ಬಿಜೆಪಿ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಸಭೆಯಲ್ಲಿ ಖೂಬಾ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮಾಜಿ ಸಚಿವ ಪ್ರಭು ಚವ್ಹಾಣ್ ಅವರಿಗೆ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ ಖೂಬಾ ಅವರಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿದರು ಎಂದು ಎಂದು ಮೂಲಗಳು ತಿಳಿಸಿದ್ದಾಗಿ ಸುದ್ದಿಸಂಸ್ಥೆ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.