ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸುತ್ತಿವೆ. ಈ ನಿಮಿತ್ತ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಮಾತುಕತೆ ನಡೆಸಿದ್ದಾರೆ.
ದೆಹಲಿಯಲ್ಲಿರುವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಜೊತೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು.
ಈ ಬಗ್ಗೆ ಮಾತನಾಡಿರುವ ಹೆಚ್ಡಿ ಕುಮಾರಸ್ವಾಮಿ ಅವರು, ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಸೇರಿದಂತೆ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿ ರಾಜ್ಯದ ಪ್ರತಿಯೊಂದು ವಿದ್ಯಮಾನವನ್ನು ಅವರ ಗಮನಕ್ಕೆ ತರಲಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನಂತರ ಕ್ಷೇತ್ರ ಹಂಚಿಕೆ, ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಚರ್ಚಿಸಿ ಅಂತಿಮಗೊಳಿಸೋಣ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಹೇಳಿದರು. ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್ ಡಿ ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಮಾಡೋಣ ಎಂದು ಶಾ ಅವರು ತಿಳಿಸಿದ್ದಾರೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಎಲ್ಲೆಡೆ ವಿರೋಧ ಸೃಷ್ಟಿಯಾಗಿದೆ.ಸರ್ಕಾರದ ವೈಫಲ್ಯಗಳನ್ನು ಜನರ ಗಮನಕ್ಕೆ ಪರಿಣಾಮಕಾರಿಯಾಗಿ ತರುವ ನಿಟ್ಟಿನಲ್ಲಿ ನಾವು ಚರ್ಚೆ ನಡೆಸಲಾಗಿದೆ. ಬರಪೀಡಿತ ಜನರಿಗೆ ರಾಜ್ಯ ಸರಕಾರ ಈವರೆಗೂ ಬಿಡಿಗಾಸನ್ನು ಕೊಟ್ಟಿಲ್ಲ ಈ ಬಗ್ಗೆ ಅವರಿಗೆ ತಿಳಿದಿದೆ. ಈಗ ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರದ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.