ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಮುಖಂಡಕಲ್ಲಡ್ಕ ಪ್ರಭಾಕರ್ ಭಟ್(Kalladka Prabhakar Bhat) ಅವರಿಗೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಪ್ರಭಾಕರ್ ಭಟ್ ಪರ ನ್ಯಾಯಾಲಯದಲ್ಲಿ ವಲಾಕತ್ತು ವಹಿಸಿದ್ದ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ಬಹಿರಂಗವಾಗಿದೆ. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ ಪ್ರಕರಣ ಸಂಬಂಧ ಕಲ್ಲಡ್ಕ ಪ್ರಭಾಕರ್ ಪರ ಡಿ. ಚಂದ್ರೇಗೌಡ ಅವರು ವಕಾಲತ್ತು ವಹಿಸಿದ್ದರು. ಅಲ್ಲದೆ, ಜನವರಿ 17 ರಂದು ಪ್ರಭಾಕರ್ ಭಟ್ಗೆ ಜಾಮೀನು ಕೂಡ ಮಂಜೂರು ಆಗಿತ್ತು. ಇತ್ತ, ಕಲ್ಲಡ್ಕ ಪ್ರಭಾಕರ್ ಅವರಿಗೆ ಜಾಮೀನು ಕೊಡಿಸಿದ್ದಕ್ಕೆ ಕಾಂಗ್ರೆಸ್ ಮುಖಂಡರು ಆಕ್ರೋಶಗೊಂಡಿದ್ದು, ಕಾಂಗ್ರೆಸ್ ಕಾನೂನು ಘಟಕದ ನಿಯಮದ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಎಎಸ್ ಗೌರಿಶಂಕರ್ ಅವರು ಚಂದ್ರೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.
ಏನಿದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ?
ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24 ರಂದು ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ್ದ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ” ಎಂದು ಹೇಳಿಕೆ ನೀಡಿದ್ದರು.
ಪ್ರಭಾಕರ್ ಭಟ್ ಹೇಳಿಕೆಯನ್ನು ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕಿದ್ದರು. ಅಲ್ಲದೆ, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ಅವರು ಕಲ್ಲಡ್ಕ ಭಟ್ ವಿರುದ್ಧ ದೂರು ನೀಡಿದ್ದರು. ಅದರಂತೆ, ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಈ ಎಫ್ಐಆರ್ ರದ್ದು ಕೋರಿ ಪ್ರಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.