ಗದಗ: ಹುಲಕೋಟಿಯ ಕೈಲಾಸ ಆಶ್ರಮದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳ ಸಾರ್ವಜನಿಕರ ಗಮನ ಸೆಳೆಯಿತು.
ಸಿರಿಧಾನ್ಯ ಪ್ರತಿಯೊಬ್ಬರ ಆರೋಗ್ಯ ರಕ್ಷಣೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ಸಂದೇಶ ಸಾರಿದ ಚಿತ್ತಾಕರ್ಷಕ ರಂಗೋಲಿಯು ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಯಿತು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಪ್ರಾಮುಖ್ಯತೆಯನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಸಿರಿಧಾನ್ಯ ಉತ್ಸವ ಆಯೋಜಿಸಲಾಗಿತ್ತು.
ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಕೂಡ ನಡೆಯಿತು. ಆಧುನಿಕ ಕೃಷಿಯಲ್ಲಿ ತಂತ್ರಜ್ಞಾನ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಕೃಷಿ ಯಂತ್ರಗಳ ಪ್ರದರ್ಶನ ನಡೆಯಿತು.
ಕೃಷಿ, ತೋಟಗಾರಿಕೆ ತಂತ್ರಜ್ಞಾನ, ನೈಸರ್ಗಿಕ ಕೃಷಿ, ಪಶು ಸಂಗೋಪನೆ, ಸಿರಿಧಾನ್ಯಗಳ ಮೌಲ್ಯವರ್ಧನೆ, ಕೃಷಿ ಆಧುನಿಕ ಉಪಕರಣಗಳ ಬಗ್ಗೆ ಪ್ರದರ್ಶನದಲ್ಲಿ ಜಾಗೃತಿ ಮೂಡಿಸಲಾಯಿತು.