ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧ ನೀತಿ ಅನುಸರಿಸುತ್ತಿದ್ದು, ಕೆರಗೋಡಿನಲ್ಲಿ ಹನುಮಧ್ವಜ ಮತ್ತು ರಾಷ್ಟ್ರಧ್ವಜಕ್ಕೂ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಸೋಮವಾರ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮಧ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದು ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ರಾಷ್ಟ್ರಧ್ವಜವನ್ನು ಮಧ್ಯಾಹ್ನ 3 ಗಂಟೆಗೆ ಹಾರಿಸುವ ಮೂಲಕ ಅಪಮಾನ ಮಾಡಿದ್ದಾರೆ. ರಾಷ್ಟ್ರಧ್ವಜವನ್ನು ಬೆಳಿಗ್ಗೆ 9 ಗಂಟೆಗೆ ಹಾರಿಸಿ ಸಂಜೆ ವೇಳೆಗೆ ಅದನ್ನು ಕೆಳಕ್ಕಿಳಿಸಬೇಕೆಂಬ ನಿಯಮವನ್ನು ಉಲ್ಲಂಘಿಸಿ ಅವಮಾನ ಮಾಡಿರುವುದನ್ನು ಖಂಡಿಸಲಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.