ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ (Assembly Session) ನಡೆಯಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ಆರೋಪ – ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಲಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಟ್ಟಿರುವ 40 ಪರ್ಸೆಂಟ್ ಕಮಿಷನ್ (40 percent commission) ಬಾಣವು ವಿಪಕ್ಷಗಳಿಗೆ ಅಸ್ತ್ರವಾದರೆ, ಈಗಾಗಲೇ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಅದನ್ನೇ ಪುನರುಚ್ಚಾರ ಮಾಡಲು ಸಿದ್ಧವಾಗಿದೆ.
ನಾಳೆಯಿಂದ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಬೆಳಗ್ಗೆ ಹನ್ನೊಂದು ಗಂಟೆಗೆ ವಿಧಾನ ಸಭೆಯಲ್ಲಿ ಜಂಟಿ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಗುಣಗಾನ ಮಾಡಲಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ.
ಮೇ ತಿಂಗಳಿಂದ ಇಲ್ಲಿಯವರೆಗಿನ ಸರ್ಕಾರದ ಸಾಧನೆಗಳ ಬಗ್ಗೆ ಪ್ರಸ್ತಾಪ ಮಾಡಲಿರುವ ರಾಜ್ಯಪಾಲರು, ಸರ್ಕಾರ ಬಂದ ಬಳಿಕ ಯಶಸ್ವಿಯಾಗಿ ಐದು ಗ್ಯಾರಂಟಿ ಯೋಜನೆಗಳ ಅಂಕಿ – ಅಂಶಗಳನ್ನು ತೆರೆದಿಡಲಿದ್ದಾರೆ. ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ ಫಲಾನುಭವಿಗಳ ಮಾತನಾಡುವ ರಾಜ್ಯಪಾಲರು, ಪ್ರತಿ ಯೋಜನೆಗಳ ಫಲಾನುಭವಿಗಳ ಬಗ್ಗೆ ಪ್ರಸ್ತಾಪಿಸಲಿದ್ದಾರೆ.