ಚಿಕ್ಕಬಳ್ಳಾಪುರ, ಫೆ.12: ಗ್ಯಾರಂಟಿ (Congress Guarantees) ಎಂದು ಕಾಂಗ್ರೆಸ್ನವರು ಕಡಿದು ಕಟ್ಟಿಹಾಕಿದ್ದು ಏನಿಲ್ಲ. ಕಾಂಗ್ರೆಸ್ ಸಾಕಷ್ಟು ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ.ಅಧಿಕಾರಕ್ಕೆ ಬಂದು ಎಂಟು ಒಂಬತ್ತು ತಿಂಗಳಾದರೂ ಅಭಿವೃದ್ಧಿ ಕಾಣಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷಬಿವೈ ವಿಜಯೇಂದ್ರ (BY Vijayendra)ಆರೋಪಿಸಿದ್ದಾರೆ.
ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಜೆಟ್ ಅಧಿವೇಶನದಲ್ಲಿ ಭಾಷಣ ಮಾಡಿದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.
ಇದನ್ನು ಮರೆಮಾಚಲು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.