ಬೆಳಗಾವಿ, ಮಾರ್ಚ್ 03: ಲೋಕಸಭೆ ಚುನಾವಣೆಗೆ (Lok Sabha Election) ಎರಡು ತಿಂಗಳು ಬಾಕಿ ಉಳಿದಿದೆ. ಭಾರತೀಯ ಜನತಾ ಪಾರ್ಟಿ (BJP) ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಅದು ಕೂಡ ಈ ಸಲ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಗೆಲವು ಸಾಧಿಸಲು ರಣತಂತ್ರ ಹೆಣೆಯುತ್ತಿದೆ. ಬಿಜೆಪಿ ಈಗಾಗಲೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಕಾರ್ನಾಟಕದ ಯಾವೊಬ್ಬ ಅಭ್ಯರ್ಥಿಯ ಹೆಸರು ಇಲ್ಲ. ಇದು ರಾಜ್ಯ ಬಿಜೆಪಿ ನಾಯಕರಿಗೆ ಸ್ವಲ್ಪ ಮಟ್ಟಿಗೆ ತಲೆನೋವಾಗಿದೆ. ಈ ಮಧ್ಯೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ (JP Nadda) ಸೋಮವಾರ (ಮಾ.04) ರಂದು ಬೆಳಗಾವಿಗೆ (Belagavi) ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.
ಸೋಮವಾರ ರಾತ್ರಿ 8 ಗಂಟೆಗೆ ಬೆಳಗಾವಿ ಸಾಂಬ್ರಾ ಏರ್ಪೋರ್ಟ್ಗೆ ಆಗಮಿಸುವ ನಡ್ಡಾ, ಬೆಳಗಾವಿಯ ಐಟಿಸಿ ವೆಲ್ಕಮ್ ಹೋಟೆಲ್ನಲ್ಲಿ ರಾತ್ರಿ 9 ಗಂಟೆಗೆ ನಾಲ್ಕು (ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ) ಲೋಕಸಭಾ ಕ್ಷೇತ್ರಗಳ ಕೋರ್ ಕಮಿಟಿ ಸದಸ್ಯರ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳು, ಸಂಸದರು, ಶಾಸಕರು, ಪ್ರಮುಖರು ಭಾಗಿಯಾಗಲಿದ್ದಾರೆ.