ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಸ್ಫೋಟ (Blast in Bengaluru) ಸಂಭವಿಸಿ 70 ಗಂಟೆಗಳೇ ಕಳೆದಿವೆ. ರಾಜ್ಯ ಪೊಲೀಸರ ಹಲವಾರು ತಂಡಗಳು ಸಿಸಿಟಿವಿ ಫೂಟೇಜ್ ಸೇರಿದಂತೆ ಎಲ್ಲ ದಿಕ್ಕುಗಳಲ್ಲೂ ತನಿಖೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರ (Karnataka Government) ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (National Investigation Agency) ವಹಿಸಿದೆ.
ಇದರ ನಡುವೆ ಮಾರ್ಚ್ 1ರಂದು ಮಧ್ಯಾಹ್ನ 12.55ರ ಹೊತ್ತಿಗೆ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕೂ 2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟಕ್ಕೂ (Mangalore Cooker Blast) ಏನಾದರೂ ಸ್ವಾಮ್ಯತೆ ಇದೆಯೇ ಎನ್ನುವ ಚರ್ಚೆ ನಡೆದಿದೆ. ರಾಜ್ಯ ಸರ್ಕಾರ ಅದಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದರೂ ಪೊಲೀಸರು ಈ ಸಂಬಂಧದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ರೂವಾರಿ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಮೊಹಮ್ಮದ್ ಶಾರಿಖ್ (Mohammad Shariq). ಅಂದು ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಹಿಡಿದುಕೊಂಡು ಹೋಗುತ್ತಿದ್ದಾಗ ರಸ್ತೆ ಮಧ್ಯೆ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಶಾರಿಖ್ ತೀವ್ರವಾಗಿ ಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಆತನನ್ನು ಈಗ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಾರಿಕ್ನ ವಿಚಾರಣೆ ನಡೆಸಿದ್ದಾರೆ. ಆದರೆ, ಶಾರಿಕ್ ಕಡೆಯಿಂದ ಪೊಲೀಸರಿಗೆ ಉಪಯುಕ್ತ ಆಗುವ ಉತ್ತರಗಳೇನು ಸಿಕ್ಕಿಲ್ಲ ಎನ್ನಲಾಗಿದೆ.