ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧದ ನಿರ್ವಹಣೆಗೆ ಸಂಬಂಧಿಸಿ, ವಿಧಾನಮಂಡಲ ಚಳಿಗಾಲದ ಅಧಿವೇಶನ ವೇಳೆ ನೀಡಿದ್ದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದರು.
ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ‘ಸೌಧದಲ್ಲಿರುವ ವಿಧಾನಸಭೆ ಮತ್ತು ಪರಿಷತ್ ಸಭಾಂಗಣದ ನಿರ್ವಹಣೆ ವಿಚಾರವಾಗಿ ಕೆಲವು ನ್ಯೂನತೆಗಳನ್ನು ಸರಿಪಡಿಸುವಂತೆ ಸೂಚಿಸಲಾಗಿತ್ತು.ಅವುಗಳನ್ನು ಪಾಲಿಸುವ ಜತೆಗೆ, ಇಡೀ ಸೌಧದ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕು’ ಎಂದರು.
‘2023ರ ಡಿಸೆಂಬರ್ನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಯಶಸ್ಸಿಗೆ ವಿವಿಧ ಸಮಿತಿಗಳ ಮುಖ್ಯಸ್ಥರು ಹಾಗೂ ಸದಸ್ಯರು ಶ್ರಮಿಸಿದ್ದಾರೆ. ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಯಾವುದೇ ಅನನುಕೂಲ ಉಂಟಾಗದಂತೆ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಿದ್ದಾರೆ.
ಇವರೆಲ್ಲರೂ ಅಭಿನಂದನೆಗೆ ಅರ್ಹರು. ಬೆಳಗಾವಿಯಲ್ಲಿ ಪ್ರತಿವರ್ಷ ಇದೇ ರೀತಿ ಅಧಿವೇಶನ ಯಶಸ್ವಿಯಾಗಿ ನಡೆಯಬೇಕು ಎಂಬುದು ನಮ್ಮ ಆಶಯ’ ಎಂದು ತಿಳಿಸಿದರು.