ಬೆಂಗಳೂರು,ಮಾ.29- ಜಿಲ್ಲೆಯಲ್ಲಿ ಉಭಯ ಬಣವನ್ನು ಸಮಾಧಾನಪಡಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ಒಂದೆಡೆ ಹೊಸ ಅಭ್ಯರ್ಥಿಯ ಹುಡುಕಾಟ ನಡೆದಿದ್ದರೆ, ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ರಮೇಶ್ ಕುಮಾರ್ ಬಣ ಹೊಸ ಪ್ರಸ್ತಾವನೆ ಮುಂದಿಟ್ಟಿದೆ.
ಈ ನಡುವೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ತನಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಾತ್ರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಶಿವಶಂಕರ ರೆಡ್ಡಿ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಮರು ಸ್ಪರ್ಧೆಗಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರ ದುಂಬಾಲು ಬಿದ್ದಿರುವುದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಬಿಸಿ ತುಪ್ಪವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಯುವ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ಕೊಡಿಸುವ ಸಂಬಂಧ ನಿರ್ಧಾರ ಕೈಗೊಂಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದರು. ಆದರೆ ವೀರಪ್ಪ ಮೊಯ್ಲಿಯವರ ಪಟ್ಟು ರಾಜ್ಯ ನಾಯಕರಿಗೆ ಇರಿಸುಮುರಿಸು ಉಂಟು ಮಾಡಿದೆ.
ಮೊಯ್ಲಿಯವರು ಕ್ಷೇತ್ರದಲ್ಲಿ ಸಕ್ರಿಯವಾಗಿಲ್ಲ, ಸಂಘಟನೆಯಲ್ಲಿ ತೊಡಗಿಸಿಕೊಂಡಿಲ್ಲ ಎಂಬ ನಾನಾ ರೀತಿಯ ದೂರುಗಳನ್ನು ಹೈಕಮಾಂಡ್ ಮುಂದಿಟ್ಟು ಟಿಕೆಟ್ ತಪ್ಪಿಸುವ ಪ್ರಯತ್ನಗಳು ನಡೆದಿದ್ದವು. ಆದರೆ ಇದ್ಯಾವುದಕ್ಕೂ ಹೈಕಮಾಂಡ್ ಬೆಲೆ ಕೊಟ್ಟಂತೆ ಕಾಣುತ್ತಿಲ್ಲ. ರಕ್ಷಾ ರಾಮಯ್ಯ ಅವರ ಹೆಸರು ಕೊನೆಕ್ಷಣದಲ್ಲಿ ಪಟ್ಟಿಗೆ ಸೇರಿರುವ ಬಗ್ಗೆ ಕ್ಷೇತ್ರದ ಕಾಂಗ್ರೆಸ್ಸಿಗರು ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.