ಬೆಂಗಳೂರು, ಏ.1: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Elections) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನಸಭೆ ಚುನಾವಣೆಯಲ್ಲಾದ ಹೀನಾಯ ಸೋಲಿನ ಕಹಿಯನ್ನು ಮರೆಯಲು ಬಿಜೆಪಿ (BJP) ಮುಂದಾಗಿದೆ. ಅಲ್ಲದೆ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಎಲ್ಲಾ 28 ಕ್ಷೇತ್ರಗಳನ್ನು ಗೆದ್ದುಕೊಳ್ಳುವ ಟಾರ್ಗೆಟ್ ಇಟ್ಟುಕೊಂಡಿದೆ. ಆದರೆ, ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಷ್ಟ ಎಂಬ ಮಾಹಿತಿ ಅರಿತ ಬಿಜೆಪಿ ಚಾಣಕ್ಯ ಎಂದು ಕರೆಯಲ್ಪಡುವ ಕೇಂದ್ರ ಗೃಹ ಸಚಿವಅಮಿತ್ ಶಾ(Amit Shah) ಅವರು ಅಂತಹ ಕ್ಷೇತ್ರಗಳಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲು ಹಾಗೂ ಅತೃಪ್ತರನ್ನು ಮನವೊಲಿಸಲು ಅಖಾಡಕ್ಕಿಳಿಯುತ್ತಿದ್ದಾರೆ.
ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ಅವರು ಲೋಕಸಭಾ ಚುನಾವಣಾ ಪ್ರಚಾರದ ಜೊತೆಗೆ ಅಸಮಾಧಾನ ಶಮನ ಮಾಡುವ ಉದ್ದೇಶವನ್ನೂ ಇಟ್ಟುಕೊಂಡಿದ್ದಾರೆ. ಇಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿರುವ ಅವರು ನಾಳೆ ಬೆಳಗ್ಗೆ 9.30ಕ್ಕೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಜೊತೆ ಉಪಹಾರ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕೇಂದ್ರ ಕ್ಷೇತ್ರ, ಉತ್ತರ ಕ್ಷೇತ್ರ, ದಕ್ಷಿಣ ಕ್ಷೇತ್ರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ ಅಮಿತ್ ಶಾ ಭಾಗಿಯಾಗಲಿದ್ದಾರೆ.