ಮಂಡ್ಯ: ಕ್ಷೇತ್ರ ಬಿಟ್ಟುಕೊಟ್ಟ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಮೈತ್ರಿ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ (Former CM HD Kumaraswamy) ಕೃತಜ್ಞತೆ ಸಲ್ಲಿಸಿದ್ದಾರೆ. ಮಂಡ್ಯದ ಪಾಂಡವಪುರದ ಕ್ಯಾತನಹಳ್ಳಿಯಲ್ಲಿರುವ ರೈತ ನಾಯಕ ದಿವಂಗತ ಕೆಎಸ್ ಪುಟ್ಟಣ್ಣಯ್ಯ (KS Puttannaiah) ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, ನಾಮಪತ್ರ ಸಲ್ಲಿಕೆಗೂ ಮೊದಲು ಹಿರಿಯ ಹೋರಾಟಗಾರರಿಗೆ ಪುಷ್ಷ ನಮನ ಸಲ್ಲಿಸುತ್ತಿದ್ದೇನೆ. ನಾಳೆ ಬೆಳಗ್ಗೆ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದ ಬಳಿಕ ನಾಮಪತ್ರ ಸಲ್ಲಿಸಲಿದ್ದೇವೆ. ಬಿಸಿಲಿನ ತಾಪಮಾನ ಹೆಚ್ಚಾಗಿರೋದ್ರಿಂದ ರೋಡ್ ಶೋ ಮಾಡದೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲಿದ್ದೇನೆ. ನಾಮಪತ್ರ ಸಲ್ಲಿಸಿದ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈಗಷ್ಟೆ ಸುಮಲತಾ ಬಿಜೆಪಿ ಸೇರುವ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ತೀರ್ಮಾನ ನಡೆದುಕೊಳ್ಳಬೇಕಾಗತ್ತದೆ. ಎಲ್ಲಾ ಅಭ್ಯರ್ಥಿಗಳ ಪರ ಮುಂದಿನ ದಿನಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಮಂಡ್ಯ ಕ್ಷೇತ್ರವನ್ನ ಅವರು ಬಿಟ್ಟುಕೊಟ್ಟಿದ್ದಕ್ಕೆ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಬಿಜೆಪಿ ಸೇರ್ಪಡೆಯ ಘೋಷಣೆ
ಮಂಡ್ಯದಲ್ಲಿ ಎನ್ಡಿಎ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿಗೆ ಸುಮಲತಾ ಅಂಬರೀಶ್ ಬೆಂಬಲ ನೀಡಿದ್ದಾರೆ. ಅಳೆದು ತೂಗಿ ಇಂದು ಸುಮಲತಾ ಅಂಬರೀಶ್ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಸೇರೋದಾಗಿ ಸುಮಲತಾ ಸ್ವಾಭಿಮಾನಿ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಮಂಡ್ಯದ ಜನತೆ ನನಗೆ ಒಳ್ಳೆಯ ಪ್ರೀತಿ ನೀಡಿದ್ದಾರೆ. ನನ್ನನ್ನು ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ರು ಕೂಡಾ, ನನ್ನ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಒಳ್ಳೆಯ ಅನುದಾನ ನೀಡಿದೆ.
ಈ ಎಲ್ಲಾ ವಿಚಾರಗಳನ್ನು ಮನಗಂಡು ನಾನು ಬಿಜೆಪಿ ಸೇರ್ಪಡೆಯಾಗಲು ನಿರ್ಧಾರ ಮಾಡಿದ್ದೇನೆ. ಇಂದು ನಾನು ಪ್ರಮಾಣ ಮಾಡ್ತಿದ್ದೀನಿ, ಎಂದೆಂದಿಗೂ ಸುಮಲತಾ ಮಂಡ್ಯ ಜನರನ್ನ ಬಿಡೋದಿಲ್ಲ ಅಂತ ಹೇಳಿದ್ರು.