ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಗಿದ ಬೆನ್ನಲ್ಲೇ ಪ್ರಚಾರದ ಅಬ್ಬರ ಜೋರಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಂತೂ ಇನ್ನಿಲ್ಲದ ರಣತಂತ್ರ ರೂಪಿಸುತ್ತಿವೆ.ಇದರ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಬಾವ ಡಾ.ಸಿ.ಎನ್.ಮಂಜುನಾಥ್ (Dr C N Manjunath) ಅವರನ್ನು ಗೆಲ್ಲಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. “ಡಿ.ಕೆ.ಶಿವಕುಮಾರ್ ಅವರ ನೋಟು ಪಡೆದು, ಡಾಕ್ಟರ್ಗೆ ಮತ ನೀಡಿ ಎಂಬುದಾಗಿ ಜನರಲ್ಲಿ ಮನವಿ ಮಾಡುತ್ತೇವೆ” ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ಗೆಲ್ಲಿಸಲು ಬಿಜೆಪಿ ನಾಯಕ ಸಿ.ಎನ್.ಅಶ್ವತ್ಥನಾರಾಯಾಣ್ ಅವರ ನಿವಾಸದಲ್ಲಿ ಎಚ್.ಡಿ.ಕುಮಾರಸ್ವಾಮಿ, ಅಶ್ವತ್ಥನಾರಾಯಣ್, ಮುನಿರತ್ನ, ಸಿ.ಪಿ.ಯೋಗೇಶ್ವರ್ ಸೇರಿ ಹಲವು ನಾಯಕರು ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, “ಇವತ್ತಿನ ಸಭೆಯಲ್ಲಿ ನಮ್ಮ ಅಭ್ಯರ್ಥಿ ಗೆಲುವಿನ ಬಗ್ಗೆ ಚರ್ಚೆಯಾಗಿದೆ. ನಮ್ಮ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಲಾಗಿದೆ. ಡಿಕೆ ನೋಟು, ಡಾಕ್ಟರ್ಗೆ ನೋಟು ಎಂಬ ಮನಸ್ಥಿತಿಗೆ ಜನ ಬಂದಿದ್ದಾರೆ” ಎಂದು ತಿಳಿಸಿದರು.