6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್ (Dwarakish) ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ (Heart Attack) ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ನಿಧನದಿಂದ (Dwarakish No More) ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ.
ಇಡೀ ಸ್ಯಾಂಡಲ್ವುಡ್ (Sandalwood) ಶೋಕ ಸಾಗರದಲ್ಲಿ ಮುಳುಗಿದೆ. ಹಿರಿಯ ನಟನ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಹಾಕಿದ್ದಾರೆ. ಸ್ಟಾರ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ.
ಇಂದು ಮುಂಜಾನೆ ದ್ವಾರಕೀಶ್ ಅವರಿಗೆ ಹೃದಯಾಘಾತ ಆಗಿದೆ. ಕಾಫಿ ಕುಡಿದು ಮಲಗಿದ ನಟ ಮತ್ತೆ ಏಳಲೇ ಇಲ್ಲ. ದ್ವಾರಕೀಶ್ ನಿಧನದ ಬಗ್ಗೆ ಮಗ ಗಿರಿ ದ್ವಾರಕೀಶ್ ಮಾಹಿತಿ ನೀಡಿದ್ರು. ದ್ವಾರಕೀಶ್ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಕೂಡ ಶಾಕ್ ಆಗಿದ್ದಾರೆ. ದ್ವಾರಕೀಶ್ ಅವರ ನಿವಾಸದಲ್ಲಿ ಇಂದು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಗ್ಗೆ 7 ಗಂಟೆಯಿಂದ 11 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ನಂತ್ರ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ದ್ವಾರಕೀಶ್ ತಿಳಿಸಿದ್ರು.
ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ತುಂಬಾ ಫೇಮಸ್ ಆಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳು ಸೂಪರ್ ಹಿಟ್ ಆಗಿದೆ.
1966ರಲ್ಲಿ ದ್ವಾರಕೀಶ್ ಅವರು ಮಮತೆಯ ಬಂಧನ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್ನಲ್ಲಿ ನಿರ್ಮಿಸಿದ್ರು. 1969ರಲ್ಲಿ ಡಾ.ರಾಜ್ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ನಿರ್ಮಾಪಕರಾದ್ರು. ಈ ಚಿತ್ರ ಬಾಕ್ಸಾಫೀಸ್ನಲ್ಲಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸು ಗಳಿಸಿದರು. ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ನಿರ್ಮಾಪಕರಾಗಿ ಹಲವು ಕಲಾವಿದರಿಗೆ ಅವಕಾಶ ನೀಡಿದ್ದಾರೆ.
1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದ್ರು. ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು. ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.