ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಎರಡೂ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಮೇಲ್ಪಟ್ಟು ಜನ ಸೇರುವ ನಿರೀಕ್ಷೆ ಇದೆ.
ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿಯಲ್ಲಿ ನಡೆಯುವ ಸಮಾವೇಶಕ್ಕೆ ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸುವ ಬೃಹತ್ ಸಾರ್ವಜನಿಕ ಸಭೆಗೆ ಸಂಜೆ 4 ಗಂಟೆಗೆ ಆಗಮಿಸಲಿದ್ದಾರೆ. ಇಲ್ಲಿ ಸುಮಾರು 1.5 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಬೆಂಗಳೂರು ಸುತ್ತಮುತ್ತಲಿನ ಎಲ್ಲ ಕ್ಷೇತ್ರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಎರಡು ಸಮಾವೇಶವನ್ನು ಆಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹಿತ ಬಿಜೆಪಿ ಹಾಗೂ ಜೆಡಿಎಸ್ನ ಒಟ್ಟು 36 ಪ್ರಮುಖರು ವೇದಿಕೆ ಹಂಚಿಕೊಳ್ಳುತ್ತಾರೆ. ಆದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುತ್ತಿಲ್ಲ ಎಂದು ತಿಳಿದು ಬಂದಿದೆ.