ಬೆಳಗಾವಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ಜಾಗ್ರತ ಮಹಿಳಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ನೇತೃತ್ವ ವಹಿಸಿದ್ದ ಮಹಿಳಾ ಹೋರಾಟಗಾರರು, ಮಠಾಧೀಶರು ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆ ವಿಧಿಸಬೇಕು, ಲವ್ ಜಿಹಾದ್ ಪ್ರತಿಬಂಧಕ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.
ಇಲ್ಲಿನ ಮಾರುತಿ ಗಲ್ಲಿಯ ಮಾರುತಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ರಾಮದೇವ ಗಲ್ಲಿ, ಶನಿವಾರ ಕೂಟ್ನಿಂದ ಕಾಕತಿವೇಸ್ನಲ್ಲಿ ಸಾಗಿದ ಪ್ರತಿಭಟನಾಕಾರರು, ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು.
ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಬೆಳಗಾವಿಯಲ್ಲಿ ಸೋಮವಾರ ಜಾಗ್ರತ ಮಹಿಳಾ ವೇದಿಕೆಯಿಂದ ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು
ಅಪಾರ ಸಂಖ್ಯೆಯಲ್ಲಿ ಸೇರಿದ ಮಹಿಳೆಯರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಮಾರ್ಗದುದ್ದಕ್ಕೂ ಆಕ್ರೋಶ ಹೊರಹಾಕಿದರು. ಲವ್ ಜಿಹಾದ್ಗೆ ಧಿಕ್ಕಾರ, ಹಿಂದೂ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ, ಕೊಲೆಗಡುಗರಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ನೇಹಾಗೆ ನ್ಯಾಯ ಕೊಡಿ ಇಲ್ಲವೇ ಕುರ್ಚಿ ಬಿಡಿ, ಜೈ ಶ್ರೀರಾಮ್ ಎಂದು ಘೋಷಣೆ ಮೊಳಗಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಕಾಲೇಜು ವಿದ್ಯಾರ್ಥಿನಿಯರು ಕೂಡ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡಿ ಎಂದು ಒತ್ತಾಯಿಸಿದರು. ಕರ್ನಾಟಕವೂ ‘ಕೇರಳ’ ರೀತಿ ಆಗುವುದಕ್ಕಿಂತ ಮುನ್ನ ಹಿಂದೂಗಳೇ ಎಚ್ಚೆತ್ತುಕೊಳ್ಳಿ ಎಂದು ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಹೆಣ್ಣುಮಕ್ಕಳು ಉರಿಬಿಸಿಲನ್ನೂ ಲೆಕ್ಕಿಸದೇ ಮಾರುಕಟ್ಟೆಯಲ್ಲಿ ಕಿಲೋಮೀಟರ್ ದೂರ ಕ್ರಮಿಸಿದರು. ಕೇಸರಿ ರುಮಾಲುಗಳನ್ನು ಕೊರಳಿಗೆ ಹಾಕಿಕೊಂಡು ಸಾಗಿದರು.
ಸಂಸದೆ ಮಂಗಲಾ ಅಂಗಡಿ, ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ ಹಾಗೂ ಬಿಜೆಪಿ ಮಹಿಳಾ ಘಟಕದ ನಾಯಕಿಯರು ಕೂಡ ಬೆಂಬಲ ಸೂಚಿಸಿದರು.