ರಾಜ್ಯದಾದ್ಯಂತ ಚುನಾವಣಾ ಪ್ರಚಾರ ಸಭೆಗಳ ತರಾತುರಿ ನಡುವೆಯೇ ಹಿರಿಯ ಪುತ್ರ, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಜಿಲ್ಲೆಯಾದ್ಯಂತ ಆಯೋಜಿಸಲಾದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ.ಕಿರಿಯ ಪುತ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಗಾಗ ಕರೆ ಮಾಡಿ ಕರ್ನಾಟಕದಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಜಿಲ್ಲೆಗಳಲ್ಲಿನ ಪ್ರಚಾರ, ರಾಜಕೀಯ ಬೆಳವಣಿಗೆಗಳ ಮಾಹಿತಿ ಪಡೆಯುವ ಧಾವಂತಲ್ಲಿದ್ದ ಸಂದರ್ಭ ಯೊಂದಿಗೆ ಮಾತಿಗೆ ಸಿಕ್ಕರು.
* ಕರ್ನಾಟಕದ ಜನತೆ ಬಿಜೆಪಿಯನ್ನು ಏಕೆ ಗೆಲ್ಲಿಸಬೇಕು?
ಮೊದಲನೆಯದ್ದು ಕಾಂಗ್ರೆಸ್ ಸರ್ಕಾರದಲ್ಲಿನ ವ್ಯಾಪಕ ಭ್ರಷ್ಟಾಚಾರ. ಎರಡನೇಯದ್ದು ಅಭಿವೃದ್ಧಿ ಯೋಜನೆಗಳು ಸಂಪೂರ್ಣ ಸ್ಥಗಿತಗೊಂಡಿರುವುದು. ಈ ಸರ್ಕಾರ ಬಂದ ಮೇಲೆ ರಾಜ್ಯದ ಯಾವುದೇ ಭಾಗದಲ್ಲಿ ಹೊಸದಾಗಿ ಒಂದು ಕಿ.ಮೀ ರಸ್ತೆ ಕೂಡ ನಿರ್ಮಾಣ ಆಗಿಲ್ಲ. ಮೂರನೆಯದ್ದು ಅನುದಾನ ದೊರೆಯದೇ ನೀರಾವರಿ ಯೋಜನೆಗಳು ಸ್ಥಗಿತಗೊಂಡಿವೆ. ಈ ಎಲ್ಲ ಅಂಶಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ಆಕ್ರೋಶ ಮೂಡಿಸಿವೆ. ಈ ಸರ್ಕಾರ ಕೇವಲ 10 ತಿಂಗಳಲ್ಲಿಯೇ ರಾಜ್ಯದ ಜನರ ನಂಬಿಕೆ, ವಿಶ್ವಾಸ ಕಳೆದುಕೊಂಡಿದೆ.
ಸಿದ್ದರಾಮಯ್ಯ ಇಲ್ಲವೇ ಕಾಂಗ್ರೆಸ್ನವರು ತಮ್ಮ ಪ್ರಧಾನಿ ಅಭ್ಯರ್ಥಿಯ ಹೆಸರು ಹೇಳಲಿ ನೋಡೋಣ. ಅವರ ಮುಂದೆ ಯಾರ ಹೆಸರೂ ಇಲ್ಲ. ಆದರೆ, ನರೇಂದ್ರ ಮೋದಿ ಇಡೀ ವಿಶ್ವವೇ ಕೊಂಡಾಡುತ್ತಿರುವ ವ್ಯಕ್ತಿ. ಮೋದಿ ಕೇಂದ್ರದಲ್ಲಿ ಮತ್ತೆ ಸರ್ಕಾರ ರಚಿಸುವುದನ್ನು ಜನರು ಕಾತರದಿಂದ ಕಾಯುತ್ತಿದ್ದಾರೆ.