ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಗುರುವಾರ ಸಂಜೆ ಹೆಬ್ಬಾಳ್ಕರ್ ನಿವಾಸಕ್ಕೆ ಆಗಮಿಸಿದ ನಿರಂಜನ್ ಹಿರೇಮಠ ದಂಪತಿ, ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಮೃಣಾಲ ಹೆಬ್ಬಾಳಕರ್ ಅವರಿಗೆ ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ನಿರಂಜನ ಹಿರೇಮಠ, ನಮ್ಮ ಕಷ್ಟಕಾಲದಲ್ಲಿ ತಮ್ಮೆಲ್ಲ ಕೆಲಸಗಳನ್ನು ಬಿಟ್ಟು ಲಕ್ಷ್ಮಿ ಹೆಬ್ಬಾಳಕರ್ ಅವರು ಸುರಿಯುತ್ತಿದ್ದ ಮಳೆಯ ಮಧ್ಯೆಯೂ ನಮ್ಮ ಮನೆಗೆ ಬಂದು ನಮ್ಮ ದುಃಖದಲ್ಲಿ ಭಾಗಿಯಾದರು. ಜೊತೆಗೆ ನಮಗೆ ಭದ್ರತೆ ಒದಗಿಸುವ, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮತ್ತು ಪ್ರಕರಣದ ತನಿಖೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪನೆ ಮಾಡುವ ಕೆಲಸ ಮಾಡಿದರು. ಹಾಗಾಗಿ ಅವರಿಗೆ ಕೃತತ್ಜ್ಞತೆ ಸಲ್ಲಿಸಬೇಕೆಂದು ನಾವು ಇಲ್ಲಿಯವರೆಗೂ ಬಂದಿದ್ದೇವೆ ಎಂದು ತಿಳಿಸಿದರು.
ನಮ್ಮ ಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು, ಜಾತಿ ಭೇದ ಮರೆತು ಎಲ್ಲರೂ ನಮ್ಮ ನೆರವಿಗೆ ನಿಂತಿದ್ದಾರೆ. ಈ ಘಟನೆಯನ್ನು ರಾಜಕೀಯಕ್ಕೆ ಬಳಸಬಾರದೆಂದು ನಾನು ಮನವಿ ಮಾಡಿದ್ದೆ. ಆ ರೀತಿ ಕೆಲವರು ಬಳಸುತ್ತಿರುವುದಕ್ಕೆ ಬೇಸರವಾಗಿದೆ. ಆದರೆ ಲಕ್ಷ್ಮೀ ಹೆಬ್ಬಾಳಕರ್ ಅವರು ಯಾವ ಸ್ವಾರ್ಥವಿಲ್ಲದೆ ತಮ್ಮದೇ ಮಗಳು ಎನ್ನುವಂತೆ ಬಂದು ನಮ್ಮೊಂದಿಗೆ ನಿಂತಿದ್ದಾರೆ. ಅವರ ನೆರವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ನಿರಂಜನ ಹಿರೇಮಠ ಹೇಳಿದರು.