ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್
ಬೆಂಗಳೂರು, ಮೇ. 03 : ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಏಪ್ರಿಲ್ 23 ರಂದು ಗಂಭೀರವಾದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಎಸ್ಯುವಿ ಮೂರು ಬಾರಿ ಪಲ್ಟಿ ಹೊಡೆದಿದೆ ಎಂದು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷರೂ ಆಗಿದ್ದ ಬೆಂಗಳೂರಿನ ಮಾಜಿ ಪೋಲೀಸ್ ಅಧಿಕಾರಿ, ಸದ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗಂಭೀರ ಅಪಘಾತದಲ್ಲಿ ಅವರ ಪಕ್ಕೆಲುಬುಗಳು ಮುರಿದಿದ್ದು, ಬೆನ್ನು ಮೂಳೆ ಮತ್ತು ಅಂಗಾಲಿಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ.
ಭಾಸ್ಕರ್ ರಾವ್ ಅವರು ಟೊಯೊಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್ನಲ್ಲಿ ಇತರ ಮೂವರೊಂದಿಗೆ ಆಂಧ್ರಪ್ರದೇಶದ ಅನಂತಪುರ ಮತ್ತು ಕದ್ರಿ ನಡುವೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದಾಗಿ ಕಾರು ಮೂರು ಬಾರಿ ಪಲ್ಟಿ ಹೊಡೆದಿದೆ. ಸಿಟ್ ಬೆಲ್ಟ್ ಮತ್ತು ಕಾರಿನ ಏರ್ ಬ್ಯಾಗ್ಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರಿನಲ್ಲಿದ್ದ ವೆಂಕಿ ಎನ್ನುವವರು ತೀವ್ರವಾಗಿ ಗಾಯಗೊಂಡು ಐಸಿಯುನಲ್ಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಭಾಸ್ಕರ್ ರಾವ್ ಅವರು ಗಾಯಗೊಂಡಿದ್ದಾರೆ. ಆದರೆ, ಇತರ ಇಬ್ಬರು ಕಿರಣ ಮತ್ತು ಬಾಬು ಹೆಚ್ಚಾಗಿ ಗಾಯಗೊಂಡಿಲ್ಲ. ಗಾಯಾಳುಗಳನ್ನು ಮೊದಲು ಬತ್ಪಾಲ್ಲಿಯ ದೂರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅನಂತಪುರಕ್ಕೆ ಸ್ಥಳಾಂತರಿಸಲಾಯಿತು. ಘಟನೆಯನ್ನು ಗುರುವಾರ ರಾತ್ರಿ ಟ್ವಿಟರ್ನಲ್ಲಿ ಬಿಜೆಪಿ ನಾಯಕ ಹಂಚಿಕೊಂಡಿದ್ದಾರೆ. ಜೊತೆಗೆ ಅಪಘಾತದ ಚಿತ್ರಗಳನ್ನು ಶೇರ್ ಮಾಡಿದ್ದಾರೆ.