ಬೆಂಗಳೂರು,ಮೇ4- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣದ ಪೆನ್ಡ್ರೈವ್ ಪ್ರಕರಣ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ಮೇಲೆ ಏನು ಪರಿಣಾಮ ಬೀರಬಹುದೆಂಬ ಲೆಕ್ಕಾಚಾರಗಳು ಆರಂಭವಾಗಿವೆ.
ಮಧ್ಯಕರ್ನಾಟಕದ ಶಿವಮೊಗ್ಗ, ದಾವಣಗೆರೆ ಹಾಗೂ ಕರಾವಳಿ ಭಾಗದ ಉತ್ತರಕನ್ನಡ ಜಿಲ್ಲೆ ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಕ್ಕೆ ಸೇರಿವೆ. ಪ್ರಸ್ತುತ 14 ಲೋಕಸಭಾ ಕ್ಷೇತ್ರಗಳಲ್ಲೂ ಪ್ರಜ್ವಲ್ ರೇವಣ್ಣ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಇದನ್ನೇ ಪ್ರಚಾರದಲ್ಲಿ ಅಸ್ತ್ರ ಮಾಡಿಕೊಂಡಿವೆ.
ಈ ನಿಟ್ಟಿನಲ್ಲಿ ಪ್ರಜ್ವಲ್ ಪ್ರಕರಣ ರಾಜಕೀಯವಾಗಿ ಈ ಭಾಗದಲ್ಲಿ ಪ್ರಮುಖ ಚುನಾವಣಾ ಅಸ್ತ್ರವಾಗಿ ಬಳಕೆಯಾಗುತ್ತಿಲ್ಲ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಇದರ ಕುರಿತಾಗಿ ಚರ್ಚೆಗಳು ನಡೆದರೂ ಅದರ ಪರಿಣಾಮ ಏನು ಎಂಬುವುದು ಕೂಡಾ ಪ್ರಮುಖ ಅಂಶವಾಗಿದೆ. ಆದರೆ ನೇಹಾ ಪ್ರಕರಣವನ್ನು ಬಿಜೆಪಿ ಈ ಭಾಗದಲ್ಲಿ ಚುನಾವಣಾ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿರುವುದಕ್ಕೆ ಕೌಂಟರ್ ನೀಡಲು ಪ್ರಜ್ವಲ್ ಪ್ರಕರಣವನ್ನು ಕಾಂಗ್ರೆಸ್ ನಾಯಕರು ಬಳಕೆ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದರ ಜೊತೆ ಜೊತೆಗೆ ವಿವಿಧ ರಾಜ್ಯಗಳ ಚುನಾವಣಾ ಪ್ರಚಾರದಲ್ಲೂ ಈ ಪ್ರಕರಣ ಸದ್ದು ಮಾಡುತ್ತಿದೆ.
ಕಾಂಗ್ರೆಸ್ ಹಾಸನ ಪ್ರಕರಣವನ್ನು ಚುನಾವಣಾ ಚರ್ಚೆಗೂ ಬಳಕೆ ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಬಿಜೆಪಿ ಲವ್ ಜಿಹಾದ್ ಎಂದು ಬಿಂಬಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇಹಾ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಘಟಾನುಘಟಿ ನಾಯಕರು ಕೂಡಾ ನೇಹಾ ಪ್ರಕರಣದಲ್ಲಿ ಧ್ವನಿ ಎತ್ತಿದ್ದಾರೆ.