ಬೆಂಗಳೂರು, ಮೇ 11: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಏಪ್ರಿಲ್ 26, ಮೇ 7 ಒಟ್ಟು ಎರಡು ಹಂತದಲ್ಲಿ ಮತದಾನ ಮುಗಿದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗುವುದು ಜೂನ್ 4ರಂದು.
ರಾಜ್ಯದಲ್ಲಿ ಮತದಾನ ಮುಗಿದರೂ ಸಹ ಲೋಕಸಭೆ ಮಾದರಿ ಚುನಾವಣಾ ನೀತಿ ಸಂಹಿತೆ ಜೂನ್ 6ರ ತನಕ ಜಾರಿಯಲ್ಲಿರುತ್ತದೆ. ಅಲ್ಲಿಯ ತನಕ ಸರ್ಕಾರ ಯಾವುದೇ ಹೊಸ ಘೋಷಣೆ ಮಾಡುವಂತಿಲ್ಲ. 2024-25ನೇ ಸಾಲಿನ ಬಜೆಟ್ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಹ ನೀತಿ ಸಂಹಿತೆ ಅಡ್ಡಿಯಾಗಿದೆ.
ರಾಜ್ಯದಲ್ಲಿ ಮತದಾನ ಮುಗಿದಿದೆ, ಆದ್ದರಿಂದ ನೀತಿ ಸಂಹಿತೆಯನ್ನು ಸಡಿಲಗೊಳಿಸಬೇಕು. ರಾಜ್ಯ ಸರ್ಕಾರದ ಯೋಜನೆಗಳ ಅನಷ್ಠಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆದಿದ್ದಾರೆ. ಇದರಿಂದಾಗಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಿದಂತಾಗಿದೆ.
ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವುದು. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯ 7ನೇ ವೇತನ ಆಯೋಗ ಮಾರ್ಚ್ 16ರಂದು ವರದಿ ಸಲ್ಲಿಸಿದೆ. ಆದರೆ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ವರದಿಯ ಕುರಿತು ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ.
ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಪತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಒಪ್ಪಿಗೆ ನೀಡಿ, ನೀತಿ ಸಂಹಿತೆ ಸಡಿಲಗೊಳಿಸಿದೆ 2024-25ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮ, ಹೊಸ ಟೆಂಡರ್ಗಳು, ಅನುದಾನ ಬಿಡುಗಡೆ, ಸರ್ಕಾರ ನೀಡಿರುವ ಭರವಸೆಗಳ ಈಡೇರಿಕೆಗೆ ಅವಕಾಶ ದೊರೆಯಲಿದೆ. ಇವುಗಳಲ್ಲಿ 7ನೇ ವೇತನ ಆಯೋಗದ ಅನುಷ್ಠಾನ ಸಹ ಸೇರಿದೆ.