ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ ಮತ್ತು ಇಂಟರ್ಪೋಲ್ ಪ್ರಜ್ವಲ್ ಕುರಿತಾದ ಮಾಹಿತಿ ಹಂಚಿಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.
ಇದೊಂದು ಸೂಕ್ಷ್ಮವಾಗಿರುವ ಪ್ರಕರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದು ಅಥವಾ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ ಅವರು ರಾಜಕೀಯ ಮುಖಂಡರಿಗೆ ಎಚ್ಚರಿಕೆ ನೀಡಿದರು.
33 ವರ್ಷದ ಪ್ರಜ್ವಲ್ ರೇವಣ್ಣ, ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಈ ಹಗರಣ ಇದೀಗ ರಾಜಕೀಯ ಬಿರುಗಾಳಿ ಎಬ್ಬಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಜಿದ್ದಾಜಿದ್ದಿಯಲ್ಲಿ ತೊಡಗಿವೆ.
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಒಂದು ದಿನದ ನಂತರ ಅಂದರೆ ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗಿದೆ. ಹಾಸನ ಲೋಕಸಭೆ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಸ್ಪರ್ಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ವಿದೇಶ ಪ್ರವಾಸ ಕೈಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಇಲ್ಲ, ಅಂತಹ ಯಾವುದೇ ಆಯ್ಕೆ ಇಲ್ಲ. ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಮತ್ತು ಇಂಟರ್ಪೋಲ್ ಪ್ರಜ್ವಲ್ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತದೆ. ಪ್ರಜ್ವಲ್ ಪತ್ತೆಯಾದ ಅಥವಾ ಗುರುತಿಸಲಾದ ಆಯಾ ದೇಶ ಇಂಟರ್ಪೋಲ್ಗೆ ಮಾಹಿತಿ ನೀಡುತ್ತಾರೆ ಮತ್ತು ನಂತರ ಸಿಬಿಐ ತಿಳಿದುಕೊಳ್ಳುತ್ತದೆ ಮತ್ತು ಅವರ ಮೂಲಕ ನಮಗೆ ತಿಳಿಯುತ್ತದೆ’ ಎಂದು ಹೇಳಿದರು.