ಬೆಂಗಳೂರು, (ಮೇ 16): ಸಿಇಟಿ ಪರೀಕ್ಷೆಯಲ್ಲಾದ(CET Exam) ಸಾಲು ಸಾಲು ಎಡವಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ (Ramya) ಅವರ ತಲೆದಂಡವಾಗಿದೆ. ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ರಮ್ಯಾ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹೆಚ್.ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶಿಸಿದೆ,
ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ವಿವಾದಕ್ಕೆ ಕಾರಣವಾಗಿತ್ತು. ಕೇವಲ ಪ್ರಶ್ನೆ ಪತ್ರಿಕೆಯಲ್ಲಿ ಮಾತ್ರ ಲೋಪವಲ್ಲದೇ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿಯೂ ಸಹ ಬೇಜವಾಬ್ದಾರಿ ಕಂಡು ಬಂದಿದೆ. ವಿದ್ಯಾರ್ಥಿಗಳಿಗೆ ದೂರದ ಊರುಗಳಲ್ಲಿ ಪರೀಕ್ಷೇ ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ರಮ್ಯಾ ವರ್ಗಾವಣೆ ಮಾಡುವಂತೆ ಆಗ್ರಹಿಸಿದ್ದರು. ಇದು ಸರ್ಕಾರಕ್ಕೆ ತೀವ್ರ ಮುಜಗರಕ್ಕೆ ಕಾರಣವಾಗಿತ್ತು.