ಧಾರವಾಡ, ಮೇ 21: ವಿದ್ಯಾಕಾಶಿ ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಹವಾಮಾನದಲ್ಲಿನ ಬದಲಾವಣೆಗಳಿಂದ ಮುಂದಿನ ಕೆಲವು ದಿನಗಳ ಕಾಲ ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹುಬ್ಬಳ್ಳಿ, ಕಲಘಟಗಿ ಸೇರಿದಂತೆ ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆ ಆಗುತ್ತಿದೆ. ಬಿಸಿಲಿನಿಂದ ರೋಸಿ ಹೋಗಿದ್ದ ಜನರಿಗೆ ಮಳೆರಾಯ ಆಗಾಗ ತಂಪೆರೆಯುತ್ತಿದ್ದಾನೆ. ಇದೀಗ ಮುಂದಿನ ಮೇ 24ರವರೆಗೂ ಇದೇ ರೀತಿಯ ಮಳೆ, ತಂಪು ವಾತಾವರಣ ಮುಂದುವರಿಯಲಿದೆ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಉಂಟಾಗುತ್ತಿದ್ದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆ ಆವರಿಸಿಕೊಂಡಿದೆ. ಇದಕ್ಕೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವೈಪರಿತ್ಯಗಳ ಪ್ರಭಾವ, ಏರಿಳಿತ ಕಾರಣ ಎಂದು ತಜ್ಞರು ಹೇಳಿದ್ದಾರೆ.