ಬೆಂಗಳೂರು :-ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತವಾಗುತ್ತಿದ್ದಂತೆ ಆಕಾಂಕ್ಷಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿ ತಮ್ಮನ್ನು ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿದ್ದ ಶಾಸಕರ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂಪುಟಕ್ಕೆ ನಮ್ಮನ್ನು ಪರಿಗಣಿಸಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಶಂಕರ್ ಪಟೇಲ್ ಮುನೇನಕೊಪ್ಪ, ಲಿಂಗಣ್ಣ ಸೇರಿದಂತೆ ಮತ್ತಿತರರ ನಿಯೋಗ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಹಾಲಿ ಸಂಪುಟದಲ್ಲಿರುವ ಕೆಲವು ಸಚಿವರಿಗೆ ಕೋಕ್ ನೀಡಿ ಪಕ್ಷಕ್ಕೆ ನಿಷ್ಠರಾಗಿರುವ ಹಾಗೂ ಮೂರರಿಂದ ನಾಲ್ಕು ಬಾರಿ ಗೆದ್ದಿರುವ ಶಾಸಕರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂದು ಒತ್ತಡ ಹೇರಿದ್ದಾರೆ.
ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಸಿಎಂ ಜೊತೆ ಮಾತುಕತೆ ನಡೆಸಿದ ನಿಯೋಗ, ಕೆಲ ಸಚಿವರು ಪಕ್ಷ ಮತ್ತು ಸರ್ಕಾರಕ್ಕೆ ಹೆಸರು ತರುವ ಕೆಲಸ ಮಾಡುತ್ತಿಲ್ಲ. ಅಂಥವರನ್ನು ಕೂಡಲೇ ಸಂಪುಟದಿಂದ ಕೈಬಿಟ್ಟು ಸಕ್ರಿಯವಾಗಿರುವ ಶಾಸಕರಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.
ಸರ್ಕಾರ ರಚನೆಯಾಗಿ ಒಂದೂವರೆ ವರ್ಷವಾದರೂ ಕೆಲವು ಸಚಿವರು ತಮ್ಮ ಇಲಾಖೆಗಳಲ್ಲಿ ಸಮರ್ಪಕವಾಗಿ ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ. ಶಾಸಕರ ಕ್ಷೇತ್ರಗಳಿಗೆ ಬೇಕಾದ ಕೆಲಸ ಕಾರ್ಯಗಳನ್ನು ಸಹ ಮಾಡಿಕೊಡುತ್ತಿಲ್ಲ. ಅಂಥವರನ್ನು ಸಂಪುಟದಿಂದ ಕೈಬಿಟ್ಟು ನಮಗೊಂದು ಅವಕಾಶ ನೀಡಿ ಎಂದು ಕೋರಿದ್ದಾರೆ.
Laxmi News 24×7