ಬೆಂಗಳೂರು ಮೇ 28: ಮೇಲ್ಮನೆ ಅಭ್ಯರ್ಥಿ ಘೋಷಣೆಗೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ವಿಮಾನದಲ್ಲೇ ಸಭೆ ನಡೆಯುವ ಸಾಧ್ಯತೆ ಇದೆ.
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಇಂದು ಬೆಳಗ್ಗೆ 11ಕ್ಕೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ.
ಜೂನ್ 13 ರಂದು ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಥಾನದ ಬಲದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಏಳು ಮಂದಿಯನ್ನು ಆಯ್ಕೆ ಮಾಡಲು ಅವಕಾಶವಿದೆ.
ಈ ಏಳು ಸ್ಥಾನಗಳಿಗೆ ಆಕಾಂಕ್ಷಿಗಳ ಸಂಖ್ಯೆ ವಿಪರೀತವಾಗಿರುವುದರಿಂದ ಸಂಭಾವ್ಯರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳದೆ ಉಭಯ ನಾಯಕರು ವಿಮಾನ ಹತ್ತಲಿದ್ದಾರೆ ಮತ್ತು ವಿಮಾನದಲ್ಲೇ ಈ ಬಗ್ಗೆ ಮೊದಲ ಬಾರಿಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಆಕಾಂಕ್ಷಿಗಳ ಸಂಖ್ಯೆ ಶತಕವನ್ನು ದಾಟಿದೆ. ಹೀಗಾಗಿ ಯಾವ ಯಾವ ಸಮುದಾಯಕ್ಕೆ ಹುದ್ದೆ ನೀಡಬೇಕು ಎಂಬುದನ್ನು ಮಾತ್ರ ಸಿದ್ದಪಡಿಸಿಕೊಂಡು ಉಭಯ ನಾಯಕರು ದೆಹಲಿಗೆ ತೆರಳಿದ್ದಾರೆ.