ಚಿತ್ರದುರ್ಗ, ಮೇ 28: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೇವಲ ಒಂದು ವಾರ ಮಾತ್ರ ಬಾಕಿ ಇದ್ದು, ಇದೀಗ ಮತದಾರರ ಚಿತ್ತ ಜೂನ್ ನಾಲ್ಕರತ್ತ ಸಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಕೋಟೆನಾಡು ಚಿತ್ರದುರ್ಗ ಯಾರ ಕೈ ಸೇರಲಿದೆ ಎನ್ನುವ ಕೂತುಹಲ ಕೆರಳಿಸಿದೆ.
ಜೂನ್ 4ರಂದು ಫಲಿತಾಂಶ ಹೊರಬೀಳಲಿದ್ದು ಕಾಂಗ್ರೆಸ್ ಮತ್ತು ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳ ನಡುವಿನ ಗೆಲುವಿನ ಲೆಕ್ಕಾಚಾರ ಜೋರಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರದಲ್ಲಿ ಪುರುಷ- 919064, ಮಹಿಳೆ-922769, ಇತರೆ-104 ಸೇರಿದಂತೆ ಒಟ್ಟು 18,41,937 ಮತದಾರರಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 72.74% ಶೇಕಡಾವಾರು ಮತದಾನ ನಡೆದಿದೆ.
ಕಾಂಗ್ರೆಸ್ ಮತ್ತು ಮೈತ್ರಿ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರ ಅಭ್ಯರ್ಥಿಗಳು ದಲಿತ ಸಮುದಾಯಕ್ಕೆ ಸೇರಿದ್ದವರಾಗಿದ್ದಾರೆ. ಕೈ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಅವರು 2014ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ 2019 ರಲ್ಲಿ ಸೋಲು ಕಂಡಿದ್ದು ಇದೀಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇನ್ನು ಎನ್ಡಿಎ ಅಭ್ಯರ್ಥಿಯಾಗಿ ಹಿರಿಯ ಅನುಭವಿ ರಾಜ್ಯ ಮಾಜಿ ಸಚಿವ ಗೋವಿಂದ ಕಾರಜೋಳ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.