ಲಕ್ಷ್ಮೇಶ್ವರ: ‘ಹಾಲುಮತ ಸಮಾಜ ಒಗ್ಗಟ್ಟಿನಿಂದ ಇರಬೇಕು. ಇಂದು ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಪ್ರತಿಭೆಗಳನ್ನು ಗುರುತಿಸಿ ಪ್ರೊತ್ಸಾಹಿಸಿದ್ದು ಶ್ಲಾಘನೀಯ. ಸಂಘಟನೆಯೊಂದಿಗೆ ರಚನಾತ್ಮಕ ಕೆಲಸಗಳನ್ನು ಮಾಡಬೇಕು. ಇಂದಿನದು ಸ್ಪರ್ಧಾತ್ಮಕ ಜಗತ್ತು.
ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆ ಇದೆ. ಅದನ್ನು ಶಿಕ್ಷಣದಿಂದ ಮಾತ್ರ ಎದುರಿಸಲು ಸಾಧ್ಯ ಎಂಬುದನ್ನು ಮರೆಯಬಾರದು’ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಹೇಳಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲ್ಲೂಕು ಘಟಕದಿಂದ ಪಟ್ಟಣದ ಚನ್ನಮ್ಮನ ವನದಲ್ಲಿ ಭಾನುವಾರ ಆಯೋಜಿಸಿದ್ದ ಹಾಲುಮತ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಮಹಿಳೆಯಿಂದ ಮಾತ್ರ ಸಮಾಜ ಸುಧಾರಣೆ ಸಾಧ್ಯ. ಅವರ ಜವಾಬ್ದಾರಿ ಬಹಳ ದೊಡ್ಡದು. ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ ನೀಡಬೇಕು. ಬಡ ಮಕ್ಕಳ ಶಿಕ್ಷಣಕ್ಕೆ ಸಮಾಜ ಸ್ಪಂದಿಸಬೇಕು’ ಎಂದು ಹೇಳಿದರು.
ಧಾರವಾಡದ ಮನ್ಸೂರಿನ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು ಮಾತನಾಡಿ, ‘ಇಂದು ಶಿಕ್ಷಣಕ್ಕೆ ಬಹಳಷ್ಟು ಬೆಲೆ ಇದೆ. ಕಾರಣ ಹಾಲುಮತ ಸಮಾಜದವರು ಮಕ್ಕಳನ್ನು ಕುರಿ ಕಾಯಲು ಬಿಡದೆ ಅವರಿಗೆ ವಿದ್ಯೆ ಕೊಡಿಸಬೇಕು. ಜೀವನದಲ್ಲಿ ಎಷ್ಟೇ ಕಷ್ಟ ಎದುರಾದರೂ ಪಾಲಕರು ಸಹಿಸಿಕೊಂಡು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ವಿದ್ಯೆ ಇದ್ದವನಿಗೆ ಮಾತ್ರ ಈ ಜಗತ್ತಿನಲ್ಲಿ ಬೆಲೆ ಎಂಬುದನ್ನು ಮರೆಯಬಾರದು’ ಎಂದರು.