ರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ
ಅಥಣಿ : ‘ಯಾವುದೇ ಕಲಾವಿದರು ಜನರಿಗೆ ಮಾದರಿಯಾಗುವಂಥ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಇಲ್ಲದಿದ್ದರೆ ರೇಣುಕಸ್ವಾಮಿ ಕೊಲೆಯಂಥ ಘಟನೆ ನಡೆಯುತ್ತವೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ರಾಜಕುಮಾರ್, ವಿಷ್ಣುವರ್ಧನ್ ಅವರಂಥ ನಟರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು.
ಪರದೆ ಮೇಲೆ ವಿವಿಧ ಪಾತ್ರಗಳನ್ನು ನಿರ್ವಹಿಸುವ ಕಲಾವಿದರು, ವಾಸ್ತವ ಬದುಕಿನಲ್ಲಿ ಜನರಿಗೆ ಮಾದರಿಯಾಗುವಂತೆ ಬದುಕಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದರು.
‘ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಪಡೆಯುವ ಹೋರಾಟ ನಿಂತಿಲ್ಲ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ. ನಮಗೆ ಸ್ಪಂದನೆ ಸಿಗದಿದ್ದರೆ, ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು