ಬೆಂಗಳೂರು, ನ.22- ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ತೂಗುಯ್ಯಾಲೆಯಾಗಿರುವಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರನೆ ನವದೆಹಲಿಗೆ ತೆರಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ರಾತ್ರಿ ಏಕಾಏಕಿ ನವದೆಹಲಿಗೆ ತೆರಳಿರುವ ವಿಜಯೇಂದ್ರ ಇಂದು ಪಕ್ಷದ ಕೆಲವು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎ.ಪಿ.ನಡ್ಡಾ , ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡು ಪ್ರವಾಸದಲ್ಲಿರುವುದರಿಂದ ಅವರನ್ನು ಭೇಟಿಯಾಗುವ ಸಾಧ್ಯತೆಗಳು ಕ್ಷೀಣಿಸಿದ್ದು , ವಿಜಯೇಂದ್ರ ಯಾವ ಕಾರಣಕ್ಕೆ ನವದೆಹಲಿಗೆ ತೆರಳಿದ್ದಾರೆ ಎಂಬುದು ಬಿಜೆಪಿ ವಲಯದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ