ರಾಜ್ಯದಲ್ಲಿ ಜುಲೈ ಒಂದರಿಂದ ಅನ್ವಯವಾಗುವಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೂ ನೀಡಲಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾರ್ವಜನಿಕರು ಜನನ ಮತ್ತು ಮರಣ ಪತ್ರಗಳಿಗಾಗಿ ಕಚೇರಿಗಳು ಮತ್ತು ಅಧಿಕಾರಿಗಳ ಬಳಿಗೆ ಅಲೆದಾಟ ನಡೆಸಬೇಕಾದ ಅನಿವಾರ್ಯತೆ ತಪ್ಪಲಿದೆಯಲ್ಲದೆ ಇನ್ನಷ್ಟು ತ್ವರಿತಗತಿಯಲ್ಲಿ ಈ ಪ್ರಮಾಣಪತ್ರಗಳು ಜನರ ಕೈಸೇರಲಿವೆ.
ಸದ್ಯದ ನಿಯಮಾವಳಿಯಂತೆ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಮತ್ತು ಆರೋಗ್ಯಾಧಿಕಾರಿಗಳಿಗೆ ಮಾತ್ರವೇ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವಿತ್ತು. ಇದರಿಂದ ಈ ಪ್ರಮಾಣ ಪತ್ರಗಳಿಗಾಗಿ ಬರುವ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿತ್ತು. ಶಿಕ್ಷಣ, ಉದ್ಯೋಗ ಮತ್ತು ಸರಕಾರಿ ಕೆಲಸಕಾರ್ಯಗಳಿಗೆ ಈ ಪ್ರಮಾಣ ಪತ್ರಗಳು ಅತ್ಯಗತ್ಯವಾಗಿದೆ. ನಿರೀಕ್ಷಿತ ಸಂಖ್ಯೆಯಲ್ಲಿ ಗ್ರಾಮ ಲೆಕ್ಕಿಗರು ಮತ್ತು ಕಂದಾಯ ನಿರೀಕ್ಷಕರು ಇಲ್ಲದಿರುವುದರಿಂದಾಗಿ ಈ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರು ಈ ಪ್ರಮಾಣ ಪತ್ರಗಳನ್ನು ಪಡೆಯಲು ಗ್ರಾಮ ಪಂಚಾಯತ್ ಕಚೇರಿ, ಆರೋಗ್ಯಾಧಿಕಾರಿಗಳ ಕಚೇರಿಗೆ ಅಲೆದಾಡಲೇ ಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.