Breaking News

ಪೋಕ್ಸೊ ಸಂತ್ರಸ್ತೆಗೆ ಬೆದರಿಕೆ: ಮಂಜುನಾಥ ಸ್ವಾಮೀಜಿ ವಿರುದ್ಧದ ವಿಚಾರಣೆಗೆ HC ತಡೆ

Spread the love

ಬೆಂಗಳೂರು: ‘ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ ಪ್ರಕರಣದಲ್ಲಿನ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್‌ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀ ಮಠ) ಬಾಲ ಮಂಜುನಾಥ ಸ್ವಾಮೀಜಿ (36) ವಿರುದ್ಧದ ವಿಚಾರಣಾ ಕೋರ್ಟ್‌ನ ನ್ಯಾಯಿಕ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿದೆ.

 

ಈ ಕುರಿತಂತೆ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರ ಸ್ವಾಮೀಜಿ ಪರ ವಕೀಲೆ ಲೀಲಾ ಪಿ.ದೇವಾಡಿಗ, ‘ಸ್ವಾಮೀಜಿ ವಿರುದ್ಧ ಹುಲಿಯೂರು ದುರ್ಗ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಆಧಾರರಹಿತ ಮತ್ತು ಕಾನೂನು ಬಾಹಿರವಾಗಿದೆ. ಮೇಲ್ನೋಟಕ್ಕೆ ಇದು ದುರುದ್ದೇಶಪೂರಿತ ಮತ್ತು ಸುಳ್ಳು ಅಂಶಗಳಿಂದ ಆವೃತವಾಗಿದೆ. ಸ್ವಾಮೀಜಿಯ ವ್ಯಕ್ತಿತ್ವಕ್ಕೆ ಮತ್ತು ಕೀರ್ತಿಗೆ ಧಕ್ಕೆ ತರುವಂತಿದೆ’ ಎಂದು ಬಲವಾಗಿ ಆಕ್ಷೇಪಿಸಿದರು.

‘ಸ್ವಾಮೀಜಿ ಸಂತ್ರಸ್ತ ಬಾಲಕಿಗೆ ಯಾವುದೇ ಬೆದರಿಕೆ ಹಾಕಿದ್ದಾರೆ ಎಂಬ ಬಗ್ಗೆ ದೂರಿನಲ್ಲಿ ಎಲ್ಲೂ ಪ್ರಸ್ತಾಪಿಸಿಲ್ಲ. ಪ್ರಾಸಿಕ್ಯೂಷನ್‌ ವಿನಾಕಾರಣ ದೂರಿನ ವ್ಯಾಪ್ತಿಯಿಂದ ಆಚೆಗೆ ಸಲ್ಲದ ಆರೋಪಗಳನ್ನು ಹೊರಿಸುತ್ತಿದೆ. ಆದ್ದರಿಂದ, ಎಫ್‌ಐಆರ್ ರದ್ದುಪಡಿಸಬೇಕು ಮತ್ತು ಕುಣಿಗಲ್‌ನ ಹೆಚ್ಚುವರಿ ಸಿವಿಲ್‌ ಜಡ್ಜ್‌ (ಹಿರಿಯ ವಿಭಾಗ) ಮತ್ತು ಸಿಜೆಎಂ ಕೋರ್ಟ್‌ನಲ್ಲಿ ಇರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣಾ ಕೋರ್ಟ್‌ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.


Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ