ಬೆಂಗಳೂರು, ಜುಲೈ 04: ಕನ್ನಡದ ಸುದ್ದಿ ವಾಹಿನಿ ಪವರ್ ಟಿವಿ ಪ್ರಸಾರ ಮತ್ತೆ ಆರಂಭಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿಲ್ಲ. ಪರವಾನಿಗೆ ನವೀಕರಿಸುವವರೆಗೂ ಪ್ರಸಾರ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿಯಲಾಗಿದೆ.
ಪವರ್ ಟಿವಿ ಕಡೆಯಿಂದ ಶೋಕಾಸ್ ನೋಟಿಸ್ಗೆ ಸಲ್ಲಿಸಿರುವ ಉತ್ತರವನ್ನು ಪರಿಗಣಿಸಿ ಪರವಾನಿಗೆ ನವೀಕರಿಸುವ ಕುರಿತು 6 ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪ್ರಕರಣ ಸ್ಥಗಿತಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ದಬ್ಬೇಗಟ್ಟ ಮಧು ಲಕ್ಷ್ಮಣ, ಮೆಸರ್ಸ್ ಮಿಟ್ಕಾನ್ ಇನ್ಫ್ರಾಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಶ್ರೀಕಾಂತ್ ಮಿಥೇಶ್ ಬಾಂಗ್ಡಿಯಾ, ಪವರ್ ಸ್ಮಾರ್ಟ್ ಮೀಡಿಯಾದ ಬೆಂಗಳೂರಿನ ಹೆಚ್ಚುವರಿ ನಿರ್ದೇಶಕ ರಾಕೇಶ್ ಶೆಟ್ಟಿ ಮೇಲ್ಮನವಿ ಸಲ್ಲಿಸಿದ್ದರು.ಈ ಬಗ್ಗೆ ವಾದ-ಪ್ರತಿವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ಕೆ. ವಿ. ಅರವಿಂದ ಅವರ ವಿಭಾಗೀಯ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿದ್ದು, ಸ್ಥಗಿತವನ್ನು 6 ವಾರಗಳ ಕಾಲ ಮುಂದುವರೆಸಿದೆ. ಜತೆಗೆ ಕೇಂದ್ರ ಸರ್ಕಾರ ಪರವಾನಿಗೆ ವಿಸ್ತರಣೆ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.