ಮುಂಬೈ: ವಾಣಿಜ್ಯ ನಗರಿ ಮುಂಬೈ ಮಹಾನಗರ ಧಾರಾಕಾರ ಮಳೆಗೆ ತತ್ತರಿಸಿದೆ. ರಸ್ತೆಗಳು ನೀರಿನಿಂದ ತುಂಬಿಹೋಗಿದ್ದು ವಾಹನಗಳು ಮುಳುಗುತ್ತಿವೆ. ಹಲವು ರೈಲುಗಳ ಮಾರ್ಗ ಬದಲಿಸಲಾಗಿದೆ.
ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ರಸ್ತೆ, ರೈಲು ಮಾರ್ಗಗಳ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಮತ್ತು ಕೆಸರು ಸಂಗ್ರಹವಾಗುತ್ತಿರುವುದರಿಂದ ವಾಹನ ಮತ್ತು ರೈಲುಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ವಿಮಾನ ನಿಲ್ದಾಣದಲ್ಲೂ ಇದೇ ಪರಿಸ್ಥಿತಿ ಇದೆ.
ವಿವಿಧೆಡೆ ರೈಲು ಹಳಿಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಇದರಿಂದಾಗಿ ಕಸರಾ ಮತ್ತು ಟಿಟ್ವಾಲಾ, ಅಟ್ಗಾಂವ್ ಮತ್ತು ಥಾನ್ಸಿತ್ ನಿಲ್ದಾಣಗಳ ನಡುವಿನ ರೈಲು ಸೇವೆಗಳನ್ನು ನಿಲ್ಲಿಸಲಾಗಿದೆ. ವಶಿಂದ್ ರೈಲು ನಿಲ್ದಾಣದ ಮೂಲಕ ಹಾದುಹೋಗುವ ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ.
ರಸ್ತೆಗಳ ಸ್ಥಿತಿ ಇನ್ನೂ ಹದಗೆಟ್ಟಿದೆ. 5-6 ಅಡಿಯಷ್ಟು ನೀರು ತುಂಬಿದೆ. ವಾಹನಗಳು ಮುಳುಗುತ್ತಿವೆ. ಸುದೀರ್ಘ ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನು ತಪ್ಪಿಸಲು, ಮುಂಬೈನ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಕಾಲೇಜುಗಳಿಗೆ ರಜೆ ಘೋಷಿಸಿವೆ.
ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂಬೈನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 8 ರಿಂದ 10 ರವರೆಗೆ ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಪುಣೆ, ನಾಸಿಕ್, ಸತಾರಾ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.