ಬೆಂಗಳೂರು: ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು, ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೊಂಡಿದ್ದಾರೆ.
ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನು ಕ್ಯಾಬಿನೆಟ್ನಲ್ಲಿಟ್ಟು ಚರ್ಚೆ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿಗಳಾದ ರಾಮಲಿಂಗಾರೆಡ್ಡಿ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಹಾಗೂ ಶಾಸಕರಾದ ಇಕ್ಬಾಲ್ ಹುಸೇನ್ ಮೊದಲಾದವರು ಡಿಕೆಶಿ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಿದರು.