ಬಾದಾಮಿ: ಬನಶಂಕರಿ ರಸ್ತೆಯ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಮೀಪ ಮಂಗಳವಾರ ಸಂಜೆ ಕಪ್ಪು ಕೋತಿಯೊಂದು ಮಹಿಳೆಯರು ಸೇರಿದಂತೆ ಎಂಟಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ ಎಂದು ಗಾಯಗೊಂಡ ಮಹಾದೇವ ಪತ್ರಿಕೆಗೆ ಹೇಳಿದರು.
ಅರಣ್ಯ ಇಲಾಖೆ ಸಿಬ್ಬಂದಿ ಕೋತಿಯನ್ನು ಹಿಡಿದು ಬೇರೆಡೆ ಸಾಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ಕೋತಿ ನೆಗೆದಾಡುತ್ತ ಜನರ ತಲೆ, ಕಾಲು, ಬೆನ್ನು ಮತ್ತು ಕೈಗೆ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗಾಯಗೊಂಡವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.
ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಅಧಿಕಾರಿ ವೀರೇಶ ಅವರನ್ನು ಪತ್ರಿಕೆ ಸಂಪರ್ಕಿಸಿದಾಗ ಕೋತಿಯನ್ನು ಹಿಡಿದು ಬೇರೆ ಕಡೆ ಸಾಗಿಸುವುದಾಗಿ ಪ್ರತಿಕ್ರಿಯಿಸಿದರು.