ಬೆಂಗಳೂರು: ರಾಜ್ಯ ಸರಕಾರದ ಕೆಲವರ ಬೆದರಿಕೆ ಮತ್ತು ಒತ್ತಡವೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ 187 ಕೋಟಿಯನ್ನು ಹಗರಣಕ್ಕೆ ಬಳಸಿಕೊಂಡಿದ್ದಾರೆ.
ಹಣವನ್ನು ಹೊರರಾಜ್ಯಕ್ಕೆ ಕಳುಹಿಸುವ ಕೆಲಸ ಮಾಡಿದ್ದಾರೆ. ಇದು ಕೇವಲ ಹಗರಣವಲ್ಲ; ಇದು ಅಕ್ಷಮ್ಯ ಅಪರಾಧ ಎಂದು ಸಭಾಧ್ಯಕ್ಷರ ಗಮನಕ್ಕೆ ತಂದರು. ಅಲ್ಲದೆ, ಮಾನ್ಯ ಮುಖ್ಯಮಂತ್ರಿಗಳು ಹಣಕಾಸಿನ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾನ್ಯ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ರಾಜ್ಯದ ಜನರ ಪರವಾಗಿ ಒತ್ತಾಯವನ್ನು ಸದನದ ಮುಂದಿಟ್ಟರು.
ಯಾರೋ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರೆ ನಾನು ರಾಜೀನಾಮೆ ಕೊಡಬೇಕಾ ಎಂದು ಆಗ ಸಚಿವರೂ ಹೇಳಿಕೆ ನೀಡಿದ್ದರು. ಇನ್ನೊಂದೆಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕೇವಲ ಅಧಿಕಾರಿಗಳು ಮಾತ್ರ ಒಳಗೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳೂ ಹೇಳಿಕೆ ನೀಡಿದ್ದರು ಎಂದು ಆಕ್ಷೇಪಿಸಿದರು.