ಚೆನ್ನೈ: ಕರ್ನಾಟಕದಿಂದ ಕಾವೇರಿ ನೀರಿ ಪಡೆಯಲು ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ತಮಿಳುನಾಡಿನ ಸರ್ವಪಕ್ಷ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶದಂತೆ ನಿತ್ಯ 1 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರವು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಸಿಎಂ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ, ಮಂಗಳವಾರ ಸರ್ವಪಕ್ಷ ಸಭೆ ಕರೆದಿತ್ತು.
ಸಭೆಯಲ್ಲಿ ಕರ್ನಾಟಕದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿ, ನಿರ್ಣಯ ಕೈಗೊಳ್ಳಲಾಯಿತು. ಜತೆಗೆ, ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನ್ಯಾಯಮಂಡಳಿ ತೀರ್ಪನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನೂ ಸಭೆಯಲ್ಲಿ ಕೈಗೊಳ್ಳಲಾಯಿತು.
ಕಳೆದ ವರ್ಷ ಕೂಡ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಬಿಡಲಿಲ್ಲ ಎಂದು ಸಿಎಂ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಬಳಿಕ ಸುಪ್ರೀಂಕೋರ್ಟ್ಗೆ ಮೊರೆ ಸಲ್ಲಿಸಿದ ಬಳಿಕವೇ ನೀರು ಬಿಡುಗಡೆಯಾಗಿತ್ತು. ಹೀಗಾಗಿ ಈ ಬಾರಿಯೂ ಆದೇಶ ಪಾಲನೆ ಆಗದೇ ಇದ್ದರೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದರು.
ಕಾವೇರಿಗಾಗಿ ರೈಲ್ ರೋಕೋ ಪ್ರತಿಭಟನೆ: ಮತ್ತೂಂದೆಡೆ ಕಾವೇರಿ ನೀರಿಗಾಗಿ ತಮಿಳುನಾಡಿನ ತಿರುವರೂರ್ ಜಿಲ್ಲೆಯ ತಿರುತುರೈಪುಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಎಡಪಕ್ಷಗಳ ಕಾರ್ಯಕರ್ತರು ರೈಲ್ ರೋಕೋ ಚಳವಳಿ ಕೈಗೊಂಡರು. ತಮಿಳುನಾಡು ತನ್ನ ಪಾಲಿನ ನೀರು ಪಡೆಯಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ತಿರುಚಿರಾಪಳ್ಳಿಯಲ್ಲಿ ಕರ್ನಾಟಕ ಬ್ಯಾಂಕಿನ ಎದುರು ಪ್ರತಿಭಟನೆ ನಡೆಸಲಾಗಿದೆ.