ಬೆಂಗಳೂರು,ನ.24- ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವುದು ಖಚಿತವಾಗಿದ್ದು, ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ ಎದುರಾಗಿದೆ. ಈ ತಿಂಗಳಾಂತ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ.
ಇದರ ಜೊತೆಗೆ ರಾಜ್ಯ ಚುನಾವಣಾ ಆಯೋಗ ಗ್ರಾಮಪಂಚಯತ್ ಚುನಾವಣೆಗೆ ಮೂಹೂರ್ತ ನಿಗಧಿ ಮಾಡುವುದು ಖಚಿತವಾಗಿದೆ. ಒಂದು ವೇಳೆ ಚುನಾವಣೆ ಘೋಷಣೆಯಾದರೆ, ಅಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಯಾವುದೇ ಪ್ರಮುಖ ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಇದೇ ವೇಳೆ ಡಿಸೆಂಬರ್ 7 ರಿಂದ 15ರವರೆಗೆ ಚಳಿಗಾಲದ ಅವೇಶನ ಆರಂಭವಾಗುತ್ತಿರುವ ಕಾರಣ, ಸಂಪುಟ ವಿಸ್ತರಣೆ ನೆನೆಗುದಿಗೆ ಬೀಳುವ ಲಕ್ಷಣಗಳೇ ಹೆಚ್ಚಾಗಿವೆ.
ಈ ಬೆಳವಣಿಗೆಗಳ ನಡುವೆಯೇ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಸಮಯ ತೆಗೆದುಕೊಳ್ಳುವಂತೆ ಕಾಣುತ್ತಿದೆ. ಪ್ರಾದೇಶಿಕ ಅಸಮಾನತೆಯಾಗದಂತೆ ನೋಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಇದರಿಂದಾಗಿಯೇ ವಿಸ್ತರಣೆಗೆ ಇಷ್ಟು ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಕಳೆದ ಹಲವು ತಿಂಗಳಿನಿಂದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಗಳು ಕೇಳಿಬರುತ್ತಲೇ ಇದ್ದವು. ಆದರೆ ಇದುವರೆಗೆ ಯಾವುದೂ ಅಂತಿಮವಾಗಿಲ್ಲ. ಈಗಾಗಲೇ ಸಿಎಂ ಯಡಿಯೂರಪ್ಪ ಮತ್ತು ಡಿಸಿಎಂ ಗೋವಿಂದ ಕಾರಜೋಳ ದೆಹಲಿಗೆ ಹೋಗಿ ಬಂದರೂ ಒಪ್ಪಿಗೆ ಮಾತ್ರ ಸಿಕ್ಕಿಲ್ಲ.ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿಬಂದರು. ಬಿಜೆಪಿ ಸರ್ಕಾರ ರಚನೆಯಲ್ಲಿ ಸಹಾಯ ಮಾಡಿದವರಿಗೆಲ್ಲ ಸಚಿವ ಸ್ಥಾನ ದೊರಕಲಿದೆ ಎಂದು ಅವರು ಹೇಳಿದ್ದರೂ ಇದುವರೆಗೆ ಅದೂ ಪೂರ್ಣವಾಗಿಲ್ಲ.