ಕೊಪ್ಪಳ, ಆಗಸ್ಟ್.10: ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲಿ (Egg) ವಂಚನೆ ಆರೋಪ ಕೇಳಿ ಬಂದಿದ್ದು ಅಂಗನವಾಡಿ (Anganwadi) ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಶಾಲೆಯ ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು ಮಾಡಿ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ. ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ ನಂತರ ಮೊಟ್ಟೆ ಕಸಿದುಕೊಳ್ಳುವ ವಿಡಿಯೋ ವೈರಲ್ ಆಗಿದೆ. ಮಕ್ಕಳು ಬಾಯಿಗೆ ಮೊಟ್ಟೆ ಹಾಕಿಕೊಳ್ಳೊಕ್ಕೆ ಮುಂಚೆನೇ ಕಾರ್ಯಕರ್ತರು ಮರಳಿ ಮೊಟ್ಟೆ ಕಸಿದಿದ್ದಾರೆ. ಈ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಕರ್ತೆ, ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಇನ್ನು ಸ್ಥಳೀಯರು ಕೂಡ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ